ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ದೆಹಲಿ ರೌಸ್ ಅವೆನ್ಯೂ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಇಡಿ) ಮುಂದಿನ ತನಿಖೆಯನ್ನು ಮುಂದುವರೆಸಬಹುದು ಎಂದು ಸ್ಪಷ್ಟಪಡಿಸಿದೆ. ಆದರೆ, ಇಡಿ ದಾಖಲಿಸಿರುವ ಪ್ರಕರಣವು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರು ಹಾಗೂ ಮ್ಯಾಜಿಸ್ಟ್ರೇಟ್ ನೀಡಿದ ಸಮನ್ಸ್ ಆದೇಶಗಳ ಆಧಾರಿತವಾಗಿದ್ದು,
ಯಾವುದೇ ಪ್ರಥಮ ಮಾಹಿತಿ ವರದಿ (ಎಫ್ಐಆರ್) ಆಧಾರಿತವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿರುವ ಆರೋಪಗಳನ್ನು ಈ ಹಂತದಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದೇ ವೇಳೆ, ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ದಾಖಲಿಸಿರುವ ಹೊಸ ಎಫ್ಐಆರ್ಗೆ ಸಂಬಂಧಿಸಿದ ವಿಚಾರಣೆಯಲ್ಲಿಯೂ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳಾಗಿರುವ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಇತರ ಆರೋಪಿಗಳು ಈ ಎಫ್ಐಆರ್ನ ಪ್ರತಿಯನ್ನು ಪಡೆಯಲು ಅರ್ಹರಲ್ಲ ಎಂದು ರೌಸ್ ಅವೆನ್ಯೂ ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಈ ಆದೇಶವನ್ನು ಗಾಂಧಿ ಕುಟುಂಬಕ್ಕೆ ಕಾನೂನು ಮಟ್ಟದಲ್ಲಿ ದೊಡ್ಡ ನಿರಾಳತೆ ಎಂದು ಪರಿಗಣಿಸಲಾಗುತ್ತಿದೆ.
ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
2021ರಲ್ಲಿ ಪ್ರಾರಂಭವಾದ ಇಡಿ ತನಿಖೆಯು ಸುಬ್ರಮಣಿಯನ್ ಸ್ವಾಮಿ ಅವರು 2014ರಲ್ಲಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನಿಂದ ಹುಟ್ಟಿಕೊಂಡಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಮೂಲಕ 50 ಲಕ್ಷ ರೂ. ಮೊತ್ತಕ್ಕೆ ಎಜೆಎಲ್ ನ 2,000 ಕೋಟಿ ರೂ. ಗಿಂತ ಹೆಚ್ಚಿನ ಮೌಲ್ಯದ ಆಸ್ತಿಗಳನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.



