ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಯಾಕಂದ್ರೆ, ಕೆ.ಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬೆಂಬಲಿಗರೇ ಕೊಂದಿರುವುದಾಗಿ ಎಫ್ಐಆರ್ ದಾಖಲಾಗಿದ್ದು, ಶಾಸಕ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ಆರೋಪಿಗಳೂ ಸಹ ಅರೆಸ್ಟ್ ಆಗಿದ್ದಾರೆ.
ಇದರ ಬೆನ್ನಲ್ಲೇ ತಮ್ಮ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. ಬೆಳ್ಳಿಯಪ್ಪ, “ವಿಚಾರಣೆಗೆ ಹಾಜರಾಗುವಂತೆ ಕೋರಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತಕ್ಷಣ ವಿಚಾರಣೆಗೆ ಪರಿಗಣಿಸಬೇಕಾದ ಅಗತ್ಯವಿರುವುದಿಲ್ಲ” ಎಂದು ತಿಳಿಸಿದರು.
ವಾದ ಮುಂದುವರೆಸಿದ ಅರ್ಜಿದಾರರ ಪರ ವಕೀಲರು, “ನಮ್ಮ ಕಕ್ಷಿದಾರರು ಏನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಅಂಶ ತಿಳಿಯುವುದಕ್ಕೂ ಮುನ್ನವೇ ಸರ್ಕಾರ ಆಕ್ಷೇಪ ವ್ಯಕ್ತಪಡಿಸುತ್ತಿದೆ. ತುರ್ತು ವಿಚಾರಣೆ ನಡೆಸುವುದಕ್ಕೆ ಸರ್ಕಾರ ಏಕೆ ಆಕ್ಷೇಪಿಸುತ್ತಿದೆ ಎಂಬುದೇ ಗೊತ್ತಿಲ್ಲ.
ಅರ್ಜಿದಾರ ಬೈರತಿ ಬಸವರಾಜ್ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ಯಾವುದೇ ಹುರಳಿಲ್ಲ. ದೂರುದಾರರು ಅವರ ಹೆಸರನ್ನೂ ಹೇಳಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ, ಮಧ್ಯಾಹ್ನ ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.



