HomeKarnataka Newsಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ; ರೈತರ ಜಮೀನು ರಕ್ಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದ...

ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ; ರೈತರ ಜಮೀನು ರಕ್ಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದ ಬಿ.ವೈ. ವಿಜಯೇಂದ್ರ

For Dai;y Updates Join Our whatsapp Group

ಬೆಂಗಳೂರು: ಬಿಡದಿ ರೈತರ ಜಮೀನು ಹಾಗೂ ರೈತರ ಹಿತರಕ್ಷಣೆಯ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಗೊಂದಲವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಎರಡೂ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದು, ರೈತರ ಹಿತರಕ್ಷಣೆಯೇ ಎರಡೂ ಪಕ್ಷಗಳ ಸಾಮಾನ್ಯ ಉದ್ದೇಶವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಬಿಡದಿ ಪಾದಯಾತ್ರೆ ವಿಚಾರದಲ್ಲಿ ಯಾರೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಹೇಳಿದ ವಿಜಯೇಂದ್ರ, ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕಳೆದ ವಾರ ದೂರವಾಣಿ ಮೂಲಕ ಮಾತನಾಡಿದ್ದಾಗಿ ತಿಳಿಸಿದರು.

ಬಿಜೆಪಿಯೂ ರೈತರ ಪರವಾಗಿದ್ದು, ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿ ಪಾದಯಾತ್ರೆ ನಡೆಸುವ ಕುರಿತು ಚರ್ಚೆ ನಡೆಸಿದ್ದೆ. ಇದಕ್ಕೆ ಕುಮಾರಸ್ವಾಮಿ ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎಂದು ವಿಜಯೇಂದ್ರ ಹೇಳಿದರು.

ನಂತರ ಜೆಡಿಎಸ್ ವತಿಯಿಂದ ಪಾದಯಾತ್ರೆಯ ದಿನಾಂಕ ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿ ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ನಿರ್ಧರಿಸಲಾಯಿತು. ಜೆಡಿಎಸ್ ಈಗಾಗಲೇ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಸಾಂಕೇತಿಕ ಬೆಂಬಲ ನೀಡುವುದು ಹಾಗೂ ಸದನದ ಒಳಗೂ ರೈತರ ಪರವಾಗಿ ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ತಾವು ಪಾದಯಾತ್ರೆಯಲ್ಲಿ ಭಾಗವಹಿಸದಿರುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹಲವು ಪೂರ್ವನಿಗದಿತ ಕಾರ್ಯಕ್ರಮಗಳು ಮುಂದೂಡಿಕೆಯಾಗಿದ್ದವು. ಭಾನುವಾರ ಕಾರ್ಯಕ್ರಮ ನಡೆಸಬೇಕೆಂಬ ಸ್ಥಳೀಯ ನಾಯಕರ ಒತ್ತಾಯದ ಹಿನ್ನೆಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮದಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತೆರಳಬೇಕಾಯಿತು ಎಂದು ಹೇಳಿದರು.

ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಪಕ್ಷದ ಮುಖಂಡರು ಸಾಂಕೇತಿಕವಾಗಿ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಒಳಗೆ ಯಾವುದೇ ಗೊಂದಲವಿಲ್ಲ. ರೈತರ ಹೋರಾಟದ ವಿಚಾರದಲ್ಲಿ ಬಿಜೆಪಿ ಸದಾ ರೈತರ ಪರವಾಗಿ ನಿಲ್ಲಲಿದೆ ಎಂದು ವಿಜಯೇಂದ್ರ ಹೇಳಿದರು.

ಬಿಡದಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ. ಪರಿಹಾರ ನೀಡುವ ಹೆಸರಿನಲ್ಲಿ ಕೆಲವರನ್ನು ಹೋರಾಟದಿಂದ ಹಿಂದೆ ಸರಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ತಮ್ಮ ಗಮನಕ್ಕೆ ಬಂದಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಈ ವಿಚಾರವನ್ನು ಈಗಾಗಲೇ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗಿದೆ. ಆದರೆ ಇದರ ಅರ್ಥ ಬಿಜೆಪಿ ಹೋರಾಟದಿಂದ ಹಿಂದೆ ಸರಿದಿದೆ ಎಂದಲ್ಲ. ಬಿಡದಿ ಮಾತ್ರವಲ್ಲದೆ ರಾಜ್ಯದಾದ್ಯಂತ ರೈತರ ಜಮೀನುಗಳ ರಕ್ಷಣೆಯ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಬಿಡದಿ, ವಿಮಾನ ನಿಲ್ದಾಣ ಸೇರಿದಂತೆ ರೈತರ ಭೂಮಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ಬಿಜೆಪಿ ರೈತರ ಪರವಾಗಿ ನಿಲ್ಲಲಿದೆ ಎಂದರು.

ಚಿಕ್ಕಬಳ್ಳಾಪುರ ಪ್ರವಾಸದ ವೇಳೆ ಶಿಡ್ಲಘಟ್ಟದಲ್ಲಿಯೂ ಕೆಐಎಡಿಬಿ ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ರೈತರ ಜಮೀನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img