ಬೆಂಗಳೂರು: ಗ್ಯಾರಂಟಿ ಅನುಷ್ಠಾನಕ್ಕೆ ಕಾರ್ಯಕರ್ತರ ನೇಮಕ ವಿಚಾರವಾಗಿ ಬಿಜೆಪಿ ನಾಯಕರು ರಾಜ್ಯಪಾಲರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.
ನಮ್ಮ ಯೋಜನೆಗಳನ್ನೇ ಬಿಜೆಪಿ ಇತರ ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮಹಾರಾಷ್ಟ್ರ ಸರ್ಕಾರ ನಮ್ಮದೇ ಗೃಹಲಕ್ಷ್ಮಿ ಯೋಜನೆಯನ್ನು ಲಾಡ್ಲಿ ಬೆಹೆನಾ ಹೆಸರಿನಲ್ಲಿ ಚುನಾವಣೆಗೂ ಮುನ್ನ ಎರಡು ತಿಂಗಳು ಹಣ ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಯೋಜನೆಯನ್ನೇ ಬಂದ್ ಮಾಡಲಾಗಿದೆ. ಇದು ಬಿಜೆಪಿ ಸರ್ಕಾರಗಳ ಸ್ಥಿತಿ ಎಂದು ವ್ಯಂಗ್ಯವಾಡಿದರು.