ವಿಜಯಸಾಕ್ಷಿ ಸುದ್ದಿ, ಗದಗ: ಸರಕಾರಿ ಆಸ್ಪತ್ರೆ ಬಳಿಯ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ಮುಚ್ಚಲು ಹೊರಡಿಸಿದ್ದ ಆದೇಶವನ್ನ ರದ್ದುಗೊಳಿಸುವಂತೆ ಆಗ್ರಹಿಸಿ ಇದೇ ಶನಿವಾರ ಜಿಲ್ಲೆಯ ಸರಕಾರಿ ಆಸ್ಪತ್ರೆಗಳ ಮುಂದೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಮೌನ ಪ್ರತಿಭಟನೆ ನಡೆಯಲಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ, ರಾಜ್ಯ ಕಾಂಗ್ರೆಸ್ ಸರ್ಕಾರ ಔಷಧಿ ಲಾಬಿಗೆ ಮಣಿದು ಸರ್ಕಾರಿ ಆಸ್ಪತ್ರೆಗಳ ಆವರಣ ಹಾಗೂ ಅಕ್ಕಪಕ್ಕದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿರುವುದು ದುರದೃಷ್ಟಕರ. ಇಂತಹ ಜನವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದ ಸರಕಾರಿ ಆಸ್ಪತ್ರೆಗಳ ಎದುರು ಶನಿವಾರ ಬೆಳಿಗ್ಗೆ 10 ಗಂಟೆಯಿAದ 12 ಗಂಟೆಯವರೆಗೆ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಮೌನ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ.
ಸದರಿ ಪ್ರತಿಭಟನೆಗಳಲ್ಲಿ ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಕಳಕಪ್ಪ ಬಂಡಿ ಭಾಗವಹಿಸಲಿದ್ದು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.