HomeIndia Newsಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು: ಮೀನೂಟ ಬಡಿಸಿ ಕಾರ್ಯಕರ್ತರ ಸಂಭ್ರಮಾಚರಣೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು: ಮೀನೂಟ ಬಡಿಸಿ ಕಾರ್ಯಕರ್ತರ ಸಂಭ್ರಮಾಚರಣೆ

For Dai;y Updates Join Our whatsapp Group

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನತ್ತ ಸಾಗುತ್ತಿದ್ದಂತೆ ಪಕ್ಷದ ಕಚೇರಿಗಳಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಕಾರ್ಯಕರ್ತರು ಮೀನು-ಅನ್ನ ಬಡಿಸಿ ಸಂಭ್ರಮಾಚರಣೆ ನಡೆಸುವ ಮೂಲಕ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮಾಂಸಾಹಾರ ನಿಷೇಧಿಸಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಇದೇ ವಿಚಾರವನ್ನು ಮುಂದಿಟ್ಟುಕೊಂಡು, ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ಮೊಟ್ಟೆ, ಮೀನು ಹಾಗೂ ಮಾಂಸ ಸೇವನೆಗೆ ನಿರ್ಬಂಧ ವಿಧಿಸಬಹುದು ಎಂದು ಪ್ರಚಾರ ನಡೆಸಿದ್ದರು.

ಈ ಆರೋಪಗಳಿಗೆ ತಿರುಗೇಟು ನೀಡುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸಾಂಪ್ರದಾಯಿಕ ಬಂಗಾಳಿ ಆಹಾರವಾದ ‘ಮಾಚ್-ಭಾತ್’ ವಿತರಿಸಿ ಸಂಭ್ರಮಿಸಿದ್ದಾರೆ. ‘ಮಾಚ್’ ಎಂದರೆ ಮೀನು ಹಾಗೂ ‘ಭಾತ್’ ಎಂದರೆ ಅನ್ನ. ಬಿಜೆಪಿ ಮಾಂಸಾಹಾರ ನಿಷೇಧಿಸುತ್ತದೆ ಎಂಬುದು ಕೇವಲ ಅಪಪ್ರಚಾರ ಎಂದು ಕಾರ್ಯಕರ್ತರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಇದೀಗ ಬಿಜೆಪಿ ಪರವಾಗಿ ತಿರುಗಿದ್ದು, ಪಕ್ಷ ಐತಿಹಾಸಿಕ ಗೆಲುವು ದಾಖಲಿಸಿದೆ. ಹಲವು ವರ್ಷಗಳಿಂದ ಮಮತಾ ಬ್ಯಾನರ್ಜಿ ಹಿಡಿತದಲ್ಲಿದ್ದ ರಾಜ್ಯದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವತ್ತ ಮುನ್ನಡೆಯುತ್ತಿದೆ.

ಲಭ್ಯವಾಗಿರುವ ಆರಂಭಿಕ ಫಲಿತಾಂಶಗಳ ಪ್ರಕಾರ ಬಿಜೆಪಿ 198 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ತೃಣಮೂಲ ಕಾಂಗ್ರೆಸ್ 89 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಒಟ್ಟು 2,926 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

ಮೊದಲ ಹಂತದಲ್ಲಿ 152 ಕ್ಷೇತ್ರಗಳಿಗೆ 1,487 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ, ಎರಡನೇ ಹಂತದಲ್ಲಿ 142 ಕ್ಷೇತ್ರಗಳಿಗೆ 1,448 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 93.19 ಶೇಕಡಾ ಹಾಗೂ ಎರಡನೇ ಹಂತದಲ್ಲಿ 92.47 ಶೇಕಡಾ ಮತದಾನ ದಾಖಲಾಗಿತ್ತು.

ರಾಜ್ಯದಲ್ಲಿ ಸರ್ಕಾರ ರಚಿಸಲು 148 ಸ್ಥಾನಗಳ ಬಹುಮತ ಅಗತ್ಯವಿದ್ದು, ಈ ಬಾರಿ 385 ಮಹಿಳಾ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಅಂತಿಮ ಫಲಿತಾಂಶ ಬಿಜೆಪಿ ಪರವಾಗಿ ಮುಂದುವರಿದರೆ, ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇದು ಮಹತ್ವದ ತಿರುವಾಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!