ಬೆಂಗಳೂರು/ಚಾಮರಾಜನಗರ: ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ವನ್ಯಜೀವಿಗಳ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿನ ಎಲ್ಲಾ ಚಾರಣಪಥ ಮತ್ತು ಸಂಚಾರ ಮಾರ್ಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಹಾಗೂ ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೆ ಚಿರತೆ, ಹುಲಿ, ಆನೆ, ಕರಡಿ ಸೇರಿದಂತೆ ಇತರೆ ವನ್ಯಜೀವಿಗಳ ಸಂಚಾರವಿರುವ ಹಾಗೂ ಮಾನವ-ವನ್ಯಜೀವಿ ಸಂಘರ್ಷ ಸಂಭವಿಸಿರುವ ಪ್ರದೇಶಗಳಲ್ಲಿ ಚಾರಣ ಮತ್ತು ಸಂಚಾರ ಚಟುವಟಿಕೆಗಳನ್ನು ತಕ್ಷಣದಿಂದಲೇ ನಿಲ್ಲಿಸಲು ಸೂಚಿಸಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.
ಚಾರಣ ಚಟುವಟಿಕೆಗಳನ್ನು ಸುರಕ್ಷಿತ ಮತ್ತು ಜವಾಬ್ದಾರಿಯುತವಾಗಿ ನಡೆಸುವಂತೆ ಸೂಚಿಸಿರುವ ಸಚಿವ ಖಂಡ್ರೆ, ಇತ್ತೀಚೆಗೆ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು (SOP) ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಎಸ್ಒಪಿ ಪಾಲನೆಗೆ ಅಗತ್ಯ ಪೂರ್ವಸಿದ್ಧತೆ ಇಲ್ಲದ ಪ್ರದೇಶಗಳಲ್ಲಿ ಚಾರಣ ಚಟುವಟಿಕೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಜಾರಿಗೆ ತಂದ ಬಳಿಕ ಮಾತ್ರ ಚಾರಣ ಚಟುವಟಿಕೆಗಳನ್ನು ಪುನರಾರಂಭಿಸಲು ಅವಕಾಶ ಇರಲಿದೆ.
ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಮೇಲ್ವಿಚಾರಣೆಯಲ್ಲಿ ನಡೆಯುವ ಚಾರಣಪಥಗಳಲ್ಲಿ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಂಡ ಬಳಿಕವೇ ಚಟುವಟಿಕೆ ಮುಂದುವರಿಸಲು ಆದೇಶಿಸಲಾಗಿದೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರು ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣದಿಂದಲೇ ಜಾರಿಗೊಳಿಸಲು ಸೂಚಿಸಲಾಗಿದೆ.



