ತುಮಕೂರು: ಜಾತ್ರೆಯ ಸಂಭ್ರಮದ ನಡುವೆ ನಡೆದಿದ್ದ ಮಗು ಅಪಹರಣ ಪ್ರಕರಣದಲ್ಲಿ ಶಿರಾ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಶಿರಾ ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ ಜಾತ್ರಾ ಮಹೋತ್ಸವದ ವೇಳೆ ಅಪಹರಣಗೊಂಡಿದ್ದ ಎರಡುವರೆ ವರ್ಷದ ಗಂಡು ಮಗು, ಬೆಂಗಳೂರಿನ ಕೊರಮಂಗಲದಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ತನಿಖೆಯ ಪ್ರಕಾರ, ಆರೋಪಿ ಶಾಂತಮೇರಿ ಎಂಬ ಮಹಿಳೆಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳು ಇದ್ದರೂ, ಗಂಡು ಮಗು ಬೇಕೆಂಬ ದುರಾಸೆಯಿಂದ ಸಂಬಂಧಿ ನರಸಯ್ಯನೊಂದಿಗೆ ಸೇರಿ ಈ ಅಪಹರಣಕ್ಕೆ ಸಂಚು ರೂಪಿಸಿದ್ದಾಳೆ. ಜಾತ್ರೆಗೆ ಎರಡು ದಿನಗಳ ಮುಂಚಿತವಾಗಿಯೇ ತುಮಕೂರಿಗೆ ಬಂದಿದ್ದ ಆರೋಪಿಗಳು, ಪೂರ್ವ ಯೋಜನೆಯೊಂದಿಗೆ ಜಾತ್ರೆಯಲ್ಲಿ ಮಗುವನ್ನು ಅಪಹರಿಸಿದ್ದಾರೆ ಎನ್ನಲಾಗಿದೆ.
ಜಾತ್ರಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಚಲನವಲನ ಪತ್ತೆ ಹಚ್ಚಿದ ಪೊಲೀಸರು, ಆಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆ ಶೋಧ ನಡೆಸಿದರು. ಕೊನೆಗೆ ಬೆಂಗಳೂರು ಕೊರಮಂಗಲದಲ್ಲಿರುವ ಶಾಂತಮೇರಿ ನಿವಾಸದಲ್ಲಿ ಮಗುವನ್ನು ಪತ್ತೆ ಮಾಡಿ ರಕ್ಷಿಸಿದ್ದಾರೆ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಈ ಘಟನೆ 21ನೇ ಶತಮಾನದಲ್ಲೂ ಸಮಾಜದಲ್ಲಿ ಜೀವಂತವಾಗಿರುವ ಲಿಂಗಭೇದ ಮನೋಭಾವದ ಮೇಲೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.



