ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆ ಫಲಾನುಭವಿಯಿಂದ ₹10,000 ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನಿಗೆ ಶಿವಮೊಗ್ಗ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ತೀರ್ಪು ನೀಡಿದೆ.
ಆರ್.ಎಸ್. ಪರಮೇಶ್ವರಪ್ಪ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾರೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಹೊಸಗುಂದದ ಹೆಚ್.ಎಸ್. ಜನಾರ್ಧನ ಅವರಿಗೆ ಮಂಜೂರಾದ ಕೊಳವೆ ಬಾವಿ ಕೊರೆಸಲು ₹10,000 ಲಂಚದ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಲಂಚ ಸ್ವೀಕರಿಸುವ ವೇಳೆ ಕಚೇರಿಯಲ್ಲೇ ಸಿಕ್ಕಿಬಿದ್ದಿದ್ದ ಪರಮೇಶ್ವರಪ್ಪ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ತನಿಖೆಯನ್ನು ಲೋಕಾಯುಕ್ತ ಡಿಎಸ್ಪಿ ಎ. ಚಂದ್ರಪ್ಪ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಲೋಕಾಯುಕ್ತ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಡಿ. ಸುಂದರ್ರಾಜ್ ವಾದ ಮಂಡಿಸಿದ್ದರು.
ಈ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪು ಭ್ರಷ್ಟಾಚಾರದ ವಿರುದ್ಧ ಕಠಿಣ ಸಂದೇಶ ನೀಡಿದಂತಾಗಿದೆ.



