ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವ ಗುರುವಾಗುತ್ತಿದ್ದು, ಇದಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಭವ್ಯ ಭಾರತ ನಿರ್ಮಾಣಕ್ಕೆ ನೀಲನಕ್ಷೆ ಹಾಕಿದೆ ಎಂದು ಬಿಜೆಪಿ ಮುಖಂಡ ವಿಜಯಕುಮಾರ ಗಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆದಾಯ ತೆರಿಗೆ ವಿನಾಯಿತಿಯನ್ನು 12 ಲಕ್ಷಕ್ಕೆ ಏರಿಸುವ ಮೂಲಕ ಭಾರತದ ಬಡ ಹಾಗೂ ಮಧ್ಯಮ ವರ್ಗದ ಹಿತವನ್ನು ಕೇಂದ್ರ ಸರ್ಕಾರ ಕಾಪಾಡಿದೆ. ಪ್ರಧಾನಿ ಮೋದಿ ಸರ್ಕಾರ ಕೇವಲ ಶ್ರೀಮಂತರ ಸರ್ಕಾರ ಎನ್ನುವ ಕಾಂಗ್ರೆಸ್ನ ವಾದವು ಸುಳ್ಳೆಂದು ಸಾಬೀತಾಗಿದೆ. ಕೃಷಿ, ಸಾರಿಗೆ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ಸರ್ವ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ವಿಶೇಷವಾಗಿ ಕಿಸಾನ್ ಕ್ರೆಡಿಟ್ ಕಾರ್ಡಿನ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸುವ ಮೂಲಕ ರೈತರ ಸಬಲೀಕರಣಕ್ಕೆ ಮೋದಿ ಸರ್ಕಾರ ಮಹತ್ವದ ಕ್ರಮ ಕೈಕೊಂಡಿದೆ.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೊಕ್ಕಸ ಖಾಲಿ ಮಾಡಿಕೊಂಡು ದಿನಕ್ಕೊಂದು ಬೆಲೆಯೇರಿಕೆ ಮಾಡಿ ಕೆಟ್ಟ ಆಡಳಿತ ನೀಡುತ್ತಿದ್ದರೆ, ಕೇಂದ್ರ ಸರ್ಕಾರ ತೆರಿಗೆ ವಿನಾಯಿತಿ ಮೂಲಕ ಜನರ ಆರ್ಥಿಕ ಹೊರೆ ನೀಗಿಸಿದೆ ಎಂದು ತಿಳಿಸಿದ್ದಾರೆ.