ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಮತ್ತು ನೆಮ್ಮದಿ ಮನುಷ್ಯನ ನಿಜವಾದ ಸಂಪತ್ತುಗಳಾಗಿವೆ. ಆಯುರ್ವೇದ ಎಂದರೆ ಆರೋಗ್ಯದಿಂದಿರುವುದು ಎಂದರ್ಥ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ನಮ್ಮ ಪೂರ್ವಿಕರು ಆರೋಗ್ಯ ಕಾಪಾಡಿಕೊಳ್ಳುವುದಕ್ಕೋಸ್ಕರ ಒಳ್ಳೆಯ ಆಹಾರ, ವಿಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರ, ಆಯುಷ್ ಇಲಾಖೆ ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದಡಿ ‘ಶ್ರೀ ಧನ್ವಂತರಿ ಜಯಂತಿ’ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ-2025ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ಹಿರಿಯರು ನಿತ್ಯ ಕರ್ಮದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂದು ತಿಳಿದು ಆರೋಗ್ಯ ಕಾಪಾಡಿಕೊಳ್ಳುತ್ತಿದ್ದರು. ಆರೋಗ್ಯದ ಹಿತದೃಷ್ಟಿಯಿಂದ ಯಾವ ಋತುಗಳಿಗೆ ಏನು ತಿನ್ನಬೇಕು ಎಂದು ತಿಳಿದುಕೊಳ್ಳುತ್ತಿದ್ದರು. ಆಯುರ್ವೇದದಿಂದ ಆರೋಗ್ಯಕರ ಸಮಾಜ ನಿರ್ಮಿಸಬಹುದಾಗಿದೆ. ಮನುಷ್ಯನು ಉತ್ಸಾಹದಿಂದಿರಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಎರಡೂ ಅಮೂಲ್ಯ. ಆದಕಾರಣ ಆಯುರ್ವೇದ ಪದ್ಧತಿ ಪ್ರಕಾರ ಪ್ರತಿಯೊಬ್ಬರೂ ಉತ್ತಮ ಆಹಾರ ಪದ್ಧತಿ, ಯೋಗ, ಧ್ಯಾನ ಅಳವಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬಹುದಾಗಿದೆ ಎಂದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಆಯುಷ್ ಇಲಾಖೆಯ ವೈದ್ಯರು ಕೈಗೊಂಡ ನಿಸ್ವಾರ್ಥ ಸೇವೆಯನ್ನು ಸ್ಮರಿಸಿಕೊಂಡರು. ಪ್ರತಿಯೊಬ್ಬರೂ ಆಯುರ್ವೇದ ಔಷಧಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಯಪಾಲಸಿಂಗ್ ಸಮೋರೇಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದಡಿ ಆಚರಿಸುತ್ತಿದ್ದೇವೆ. ಆಯುರ್ವೇದ ಚಿಕಿತ್ಸೆಯಿಂದ ರೋಗಿಗಳು ಯಾವುದೇ ದುಷ್ಪರಿಣಾಮ ಇಲ್ಲದೇ ಗುಣಮುಖ ಹೊಂದಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆಯ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಪಾಪನಾಶಿ ಹಾಗೂ ಅಂತೂರು-ಬೆಂತೂರು ಆಯುಷ್ಮಾನ್ ಆರೋಗ್ಯ ಮಂದಿರದ ಯೋಗ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿತು. ಡಾ. ಮಹೇಶ ಹಿರೇಮಠ ಅನಾರೋಗ್ಯದಿಂದ ಆರೋಗ್ಯದ ಕಡೆಗೆ’ ವಿಷಯದ ಕುರಿತಾಗಿ ಉಪನ್ಯಾಸ ನೀಡಿದರು. ಡಾ. ಪ್ರವೀಣ ಸರ್ವದೆ `ಬೊಜ್ಜು ನಿವಾರಣೆಯಲ್ಲಿ ಆಹಾರದ ಪಾತ್ರ’ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಆಯುಷ್ ವೈದ್ಯಾಧಿಕಾರಿಗಳು, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾ ಘಟಕದವರು, ನರ್ಸಿಂಗ್ ವಿದ್ಯಾರ್ಥಿಗಳು, ವೈದ್ಯಾಧಿಕಾರಿಗಳು, ಎಸ್.ಸಿ. ತೋಟಗಂಟಿಮಠ ಕಾಲೇಜಿನ ವಿದ್ಯಾರ್ಥಿಗಳು, ಗಾಲಾ ನರ್ಸಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು, ಆಯುಷ್ ಇಲಾಖೆಯವರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಡಾ. ಬಿ.ಎಂ. ಲೋಕಾಪುರ ಸ್ವಾಗತಿಸಿದರು. ಡಾ. ಅಶೋಕ ಮತ್ತಿಗಟ್ಟಿ ಧ್ವನಂತರಿ ಸ್ತೋತ್ರವನ್ನು ಪಠಿಸಿದರು. ಡಾ. ನೇತ್ರಾವತಿ ರಾಯ್ಕರ್ ಪ್ರಾರ್ಥಿಸಿದರು. ಡಾ. ಸಂಜೀವ ನಾರಪ್ಪನವರ ನಿರೂಪಿಸಿದರು. ಡಾ. ಕಮಲಾಕರ ಅರಳೆ ವಂದಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಶ್ರೇಷ್ಠ ಚಿಕಿತ್ಸೆಯಾಗಿದೆ. ಇಂದಿನ ದಿನಮಾನಗಳಲ್ಲಿ ಕಲಬೆರಕೆ ಆಹಾರದಿಂದ, ನಿಗದಿತ ಸಮಯದಲ್ಲಿ ಊಟ ಮಾಡದೇ ಇರುವುದರಿಂದ, ರೋಗ ರುಜಿನಗಳನ್ನು ನಾವೇ ಬರಮಾಡಿಕೊಳ್ಳುತ್ತಿದ್ದೇವೆ. ಆಯುರ್ವೇದ ಚಿಕಿತ್ಸೆಯಲ್ಲಿ ವಿಶೇಷ ಶಕ್ತಿಯಿದೆ. ಆಯುರ್ವೇದ ಚಿಕಿತ್ಸೆಗಳು ಪ್ರಾಚೀನ ಚಿಕಿತ್ಸೆಗಳಾಗಿದ್ದು, ರೋಗಗಳನ್ನು ಯಾವುದೇ ದುಷ್ಪರಿಣಾಮ ಇಲ್ಲದೇ ಗುಣಪಡಿಸುವ ಶಕ್ತಿ ಇದಕ್ಕಿದೆ ಎಂದು ತಿಳಿಸಿದರು.



