ಬೆಂಗಳೂರು:- ಮಾರ್ಗದ ಮಧ್ಯೆ ಬಸ್ ನಿಲ್ಲಿಸಿ ಪ್ರಯಾಣಿಕರ ಸೀಟಿನ ಮೇಲೆ ಕಂಡಕ್ಟರ್ ಕಂ ಡ್ರೈವರ್ ನಮಾಜ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತನಿಖೆಗೆ ಆದೇಶಿಸಿದ್ದಾರೆ.
ಹಾವೇರಿಯಲ್ಲಿ ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ಕಂ ಕಂಡಕ್ಟರ್ ನಮಾಜ್ ಮಾಡಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ಸಚಿವರು ಈ ಕ್ರಮ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಪತ್ರ ಬರೆದ ರಾಮಲಿಂಗಾ ರೆಡ್ಡಿ, ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.
ರಾಮಲಿಂಗಾರೆಡ್ಡಿ ಪತ್ರದಲ್ಲಿ ಹೇಳಿದ್ದೇನು?
ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ ಕಂ ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಅದರಲ್ಲೂ ಬಸ್ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ.
ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸೂಕ್ತ ಶಿಸ್ತಿನ ಕ್ರಮ ಜರುಗಿಸಲು ಸೂಚಿಸಿದ್ದಾರೆ.



