ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಜಿಎಸ್ಟಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಹಲವು ವರ್ಷಗಳ ಹಿಂದಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನೀಡುತ್ತಿರುವ ನೋಟಿಸ್ಗಳಿಂದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಪ್ರಕರಣಗಳಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಗತ್ಯ ನೆರವು ನೀಡಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಪವನ್ ಚೋಪ್ರಾ ಭರವಸೆ ನೀಡಿದರು.
ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಮುಂಡರಗಿ ವ್ಯಾಪಾರಸ್ಥರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯಲ್ಲಿ ವ್ಯಾಪಾರಸ್ಥರು ಜಿಎಸ್ಟಿ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು 5ರಿಂದ 6 ವರ್ಷಗಳ ಹಿಂದಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನೋಟಿಸ್ ನೀಡುತ್ತಿರುವುದರಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತಿದೆ ಎಂದು ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಪವನ್ ಚೋಪ್ರಾ, ಇಂತಹ ಪ್ರಕರಣಗಳಲ್ಲಿ ವ್ಯಾಪಾರಸ್ಥರು ಸಂಸ್ಥೆಯನ್ನು ಸಂಪರ್ಕಿಸಿದರೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ನ್ಯಾಯಸಮ್ಮತವಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮುಂಡರಗಿ ಭಾಗದಲ್ಲಿ ಯಾವುದೇ ಪ್ರಮುಖ ಕೈಗಾರಿಕೆಗಳಿಲ್ಲದ ಕಾರಣ ಹೊಸ ಕೈಗಾರಿಕಾ ಪ್ರದೇಶ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ರೈತರು ಗೋವಿನಜೋಳ ಸೇರಿದಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯಾಪ್ತಿಯ ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆಯಲ್ಲಿಯೇ ಮಾರಾಟ ಮಾಡಿದರೆ ಸರ್ಕಾರದ ಪ್ರೋತ್ಸಾಹಧನದ ಲಾಭ ದೊರೆಯುವುದರ ಜೊತೆಗೆ ರೈತರು ಮತ್ತು ವ್ಯಾಪಾರಸ್ಥರ ನಡುವೆ ಉತ್ತಮ ಬಾಂಧವ್ಯ ಬೆಳೆಯಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿ ಉನ್ನತ ಶಿಕ್ಷಣ ಪೂರ್ಣಗೊಳಿಸಿ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಆಗಿ ಸಾಧನೆ ಮಾಡಿದ ವ್ಯಾಪಾರಸ್ಥರ ಮಕ್ಕಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ವೇಳೆ ಮುಂಡರಗಿಯ ವರ್ತಕರಾದ ಗಿರೀಶ್ ಹಾವನಾಳ, ಕೋಟ್ರೇಶ್ ಸೇರಿದಂತೆ ಗಣ್ಯರನ್ನು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಗೌರವಿಸಲಾಯಿತು.



