ಉಡುಪಿ: ಪ್ರೀತಿಸಿ ಮದುವೆಯಾದ ಸಂಬಂಧ ಕೇವಲ ಒಂದು ತಿಂಗಳಲ್ಲಿ ದುರಂತ ಅಂತ್ಯ ಕಂಡಿರುವ ಶಾಕಿಂಗ್ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿ ಸೌಮ್ಯ ಶೆಟ್ಟಿಯ ಪಾತ್ರ ಗಂಭೀರ ಅನುಮಾನಕ್ಕೆ ಕಾರಣವಾಗಿದ್ದು, ಇದೀಗ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 17ರಂದು ನಡೆದ ಮದುವೆಯ ಬಳಿಕ, ಸುದೀಪ್ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು. ಆದರೆ ವೈವಾಹಿಕ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
ಮಾರ್ಚ್ 17ರಂದು ತಾಯಿಯೊಂದಿಗೆ ತೆರಳುತ್ತಿದ್ದ ವೇಳೆ, ಸೌಮ್ಯ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ನಿಂದನೆ ಮತ್ತು ಬೆದರಿಕೆ ಹಾಕಿದ್ದಾಳೆಂದು ಆರೋಪಿಸಲಾಗಿದೆ. ಈ ಘಟನೆ ಸುದೀಪ್ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರಿತ್ತು ಎಂದು ಕುಟುಂಬ ಹೇಳಿದೆ.
ಇದಾದ ಬಳಿಕ, ಮಾರ್ಚ್ 22ರಂದು ವಿಷ ಸೇವಿಸಿದ ಸುದೀಪ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಮಾರ್ಚ್ 29ರಂದು ಅವರು ಸಾವನ್ನಪ್ಪಿದರು. ಈ ನಡುವೆ, ಸೌಮ್ಯ ಶೆಟ್ಟಿ ಸಂಬಂಧಿಕರಿಗೆ ಕರೆಮಾಡಿ ಘಟನೆ ತಿಳಿಸಿದ್ದಳು.
ಮೃತನ ತಂದೆ ದಾಮೋದರ ಶೆಟ್ಟಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿ, ಸೌಮ್ಯ ಶೆಟ್ಟಿಯ ವಿರುದ್ಧ ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಮಾನಸಿಕ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪಗಳು ಗಂಭೀರವಾಗಿ ಪರಿಗಣಿಸಲ್ಪಟ್ಟಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



