ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜ್ಯ ಪದಾಧಿಕಾರಿಗಳ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವಿಜಯೇಂದ್ರ, ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಸಂಗ್ರಹಿಸಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಈಗಾಗಲೇ ದೇಶಾದ್ಯಂತ 14 ರಾಜ್ಯಗಳಲ್ಲಿ ಮಾತ್ರ ಅಧ್ಯಕ್ಷರನ್ನ ನೇಮಿಸಲಾಗಿದೆ. ಉಳಿದ ರಾಜ್ಯಗಳಲ್ಲೂ ಆಯ್ಕೆ ಮಾಡಲಿದ್ದಾರೆ. ಇದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರನ್ನ ನೇಮಕ ಮಾಡಲಿದ್ದಾರೆ. ಇದು ಬಿಜೆಪಿ ಪಕ್ಷದಲ್ಲಿರುವಂತ ಒಂದು ವಿಧಾನ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆಯಾಗುವ ಸುಳಿವು ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ಕುರಿತ ನಿರೀಕ್ಷೆ ಹಾಗೂ ಸಸ್ಪೆನ್ಸ್ ಏಕಕಾಲದಲ್ಲಿ ಮುಂದುವರೆದಿದೆ. ಇದರ ನಡುವೆ ನಿನ್ನೆ ಬೆಳಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ದೆಹಲಿಗೆ ತೆರಳಿದ್ದು, ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕದ ಬಗ್ಗೆ ಚರ್ಚೆ ನಡೆದಿದ್ದು, ಕೆಲ ಮಹತ್ವದ ಬದಲಾವಣೆಗೆ ಅಶೋಕ್ ಮನವಿ ಮಾಡಿದಂತಿದೆ. ಹೀಗಾಗಿ ಹೈಕಮಾಂಡ್ ಕೂಡಲೇ ವಿಜಯೇಂದ್ರ ಅವರನ್ನ ಕರೆಯಿಸಿಕೊಂಡು ಈ ಬಗ್ಗೆ ಚರ್ಚಿಸಿದೆ ಎನ್ನಲಾಗಿದೆ. ಇದರಿಂದ ವಿಜಯೇಂದ್ರ ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆಯೇ ಪದಾಧಿಕಾರಿಗಳ ಬದಲಾವಣೆ ಬಗ್ಗೆ ಮಾತುಗಳನ್ನಾಡಿದ್ದಾರೆ.