ಬೆಂಗಳೂರು: ಮೈಕ್ರೋ ಫೈನಾನ್ಸ್ ಅಟ್ಟಹಾಸದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ ತರುವ ಮಸೂದೆಗೆ ಒಪ್ಪಿಗೆ ನೀಡಿದೆ. ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಿದೆ.
ಇನ್ನು ಮೈಕ್ರೋಫೈನಾನ್ಸ್ ವಿಚಾರದ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ಕ್ಯಾಬಿನೆಟ್ ಸಿಎಂಗೆ ನಿರ್ಣಯ ಕೈಗೊಳ್ಳುವ ಪರಮಾಧಿಕಾರ ನೀಡಿದ್ದು, ಕೆಲವು ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಈ ಕಾರಣಕ್ಕೆ ಚರ್ಚೆಯ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.
ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್, ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ.
ಇಂದು ಕೂಡ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.