ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, “ಮನೆಗೊಂದು ಗಿಡ-ಊರಿಗೊಂದು ವನ” ಎಂಬ ಸಂಕಲ್ಪದೊಂದಿಗೆ ಪ್ರತಿಯೊಬ್ಬರೂ ಪರಿಸರ ಉಳಿವಿಗೆ ಕೈಜೋಡಿಸಬೇಕು ಎಂದು ಅಮ್ಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಮಾಜಸೇವಕಿ ಡಾ. ಸಾಹಿರಾ ಬಾನು ಕರೆ ನೀಡಿದರು.
ಪಟ್ಟಣದ ಸೋನಿಯಾ ಗಾಂಧಿನಗರದಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನಶೈಲಿಯಿಂದ ಪರಿಸರ ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಾಗತಿಕ ತಾಪಮಾನ ಏರಿಕೆ ಮನುಕುಲಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮರಗಳ ಸಂರಕ್ಷಣೆ ಮತ್ತು ವೃಕ್ಷಾರೋಪಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಹಾಗೂ ಅಮ್ಮ ಸಂಸ್ಥೆಯ ನಿರ್ದೇಶಕಿ ರೇಷ್ಮಾ ಸಿಕಂದರ್ ಮಾತನಾಡಿ, ಪರಿಸರವನ್ನು ನಿರ್ಲಕ್ಷಿಸಿದರೆ ಭವಿಷ್ಯದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪಾಲಕರು ಮಕ್ಕಳನ್ನು ಬೆಳೆಸುವಷ್ಟೇ ಕಾಳಜಿಯಿಂದ ಗಿಡಗಳನ್ನು ಬೆಳೆಸಿ ಸಂರಕ್ಷಿಸಬೇಕು ಎಂದು ತಿಳಿಸಿದರು.
ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಪರಿಸರ ಸಮತೋಲನ ಕಾಪಾಡುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಯಶೋಧ ಮಂಜುನಾಥ್, ಅಮ್ಮ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಶಿಯಾ ಬೇಗಂ, ನಿರ್ದೇಶಕಿ ನಜ್ಮಾ, ರೋಹಿಣಿ ಗುರುರಾಜ್, ಆಶಾ ಕಾರ್ಯಕರ್ತೆ ಮುದ್ದಕ್ಕ ಸೇರಿದಂತೆ ಅಮ್ಮ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
“ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ‘ಮನೆಗೊಂದು ಗಿಡ, ಊರಿಗೊಂದು ವನ’ ಎಂಬುದು ನಮ್ಮ ಮೂಲಮಂತ್ರವಾಗಬೇಕು.”
– ಡಾ. ಸಾಹಿರಾ ಬಾನು, ಅಮ್ಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥೆ



