ವಿಜಯಸಾಕ್ಷಿ ಸುದ್ದಿ, ಗದಗ: ಕಣವಿ ಗ್ರಾಮದ ಶ್ರೀ ಮ.ಫ. ಆಲೂರ ಹಾಗೂ ಶ್ರೀಮತಿ ಪಾ.ನಿಂ. ದೊಡ್ಡಗೌಡರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಸಂಭ್ರಮದ ದಸರಾ-ಸಂತಸದ ಕಲಿಕಾ ಶಿಬಿರ ನೆರವೇರಿತು.
ತಾಲೂಕಾ ಅಕ್ಷರ ದಾಸೋಹ ಸಹ ನಿರ್ದೇಶಕ ಶಂಕರ ಹಡಗಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವರ್ಗ ಕೋಣೆಯ ಕಲಿಕೆ ನಿತ್ಯ ಜೀವನದಲ್ಲಿ ಬಳಕೆಯಾಗಬೇಕು. ವರ್ಗ ಕೋಣೆಯಾಚೆ ಇಂತಹ ಚಟುವಟಿಕೆಗಳು ಸಂತಸದಾಯಕ ಕಲಿಕೆಯನ್ನು ಉಂಟುಮಾಡುತ್ತವೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಲಿಕೆಗೆ ಪೂರಕವಾಗಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಮಾತನಾಡಿ, ತರಗತಿ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ದೈಹಿಕ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸರ್ವತೋಮುಖ ವಿಕಾಸ ಉಂಟುಮಾಡುತ್ತದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಎಸ್.ಆಯ್. ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಇಂತಹ ಶಿಬಿರಗಳು ಮಕ್ಕಳಲ್ಲಿ ಒತ್ತಡ ಕಡಿಮೆ ಮಾಡಿ ಸಂತಸದಿಂದ ಕಲಿಯಲು ಸಹಾಯಕವಾಗಿವೆ ಎಂದು ಹೇಳಿದರು.
ಎಸ್ಡಿಎಮ್ಸಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮದ ಗುರು-ಹಿರಿಯರು, ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎಮ್.ಎಸ್. ಗಾರವಾಡ ಕಾರ್ಯಕ್ರಮ ನಿರೂಪಿಸಿದರು. ಎಸ್.ಜೆ. ಮೂಲಿಮನಿ ವಂದಿಸಿದರು.