ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ರೋಜಗಾರ ಮೇಳದ ಮೂಲಕ 10 ವರ್ಷದಲ್ಲಿ 10 ಲಕ್ಷ ಉದ್ಯೋಗ ನೀಡುವ ಗುರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಂದಿದ್ದರು. ಅದರಂತೆ ರೋಜಗಾರ ಮೇಳದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ವಿತರಣೆ ಮಾಡಲಾಗುತ್ತಿದೆ. ಇಪಿಎಫ್ಒನಲ್ಲಿ 23.73 ಕೋಟಿ ಹೊಸ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಶನಿವಾರ ಕೇಶ್ವಾಪುರದ ಆಫೀಸರ್ಸ್ ಕ್ಲಬ್ನಲ್ಲಿ ನೈರುತ್ಯ ರೈಲ್ವೆ ಸಹಯೋಗದಲ್ಲಿ ಆಯೋಜಿಸಿದ್ದ ರೋಜಗಾರ್ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 10 ವರ್ಷದಲ್ಲಿ ಸುಮಾರು 40 ಸಾವಿರ ಕಿ.ಮೀ. ರೈಲ್ವೆ ವಿದ್ಯುದೀಕರಣ ಮಾಡಲಾಗಿದೆ. 10 ವರ್ಷಗಳ ಹಿಂದೆ ಸುಮಾರು 23 ಸಾವಿರ ಕಿ.ಮೀ. ವಿದ್ಯುದೀಕರಣ ಮಾಡಲಾಗಿತ್ತು. ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಪಡಿತರವನ್ನು ವಿತರಿಸಲಾಗುತ್ತಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲಾಗಿದೆ. ರಾಷ್ಟçದಲ್ಲಿ ಮೂಲಸೌಕರ್ಯ ಸುಧಾರಣೆಯಾಗಿದೆ. ಮಹಿಳೆಯರು ಸಹ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತೀಯ ವಾಯು ಸೇನೆಯಲ್ಲಿ ಮಹಿಳಾ ಪೈಲಟ್ಗಳು ವಿಮಾನವನ್ನು ಚಲಾಯಿಸುತ್ತಿದ್ದಾರೆ. ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಅವರು ಹಾರೈಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಮುಖುಲ್ ಶರಣ ಮಾಥುರ್, ಡಿಆರ್ಎಂ ಬೀಲಾ ಮೀನಾ, ಪಿಸಿಪಿಒ ಸೂರ್ಯ ಪ್ರಕಾಶ ಸೇರಿದಂತೆ ರೈಲ್ವೆ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ರೋಜಗಾರ್ ಮೇಳ ಕಾರ್ಯಕ್ರಮಗಳ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಸುಮಾರು 7.72 ಲಕ್ಷ ಉದ್ಯೋಗ ಪತ್ರಗಳನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.