ರಾಮನಗರ:- ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ವೃದ್ಧ ದಂಪತಿ ಪ್ರಯಾಣಿಸುತ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿ ಮೂರ್ನಾಲ್ಕು ಪಲ್ಟಿಯಾದ ಘಟನೆ ಜರುಗಿದೆ.
ಕಳೆದ ಡಿಸೆಂಬರ್ನಲ್ಲಿ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸೀಟ್ ಬೆಲ್ಟ್ ಧರಿಸಿದ್ದರಿಂದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಮೂಲದ 84 ವರ್ಷದ ಅಬ್ದುಲ್ ಫಜಲ್ ತಮ್ಮ ಪತ್ನಿ ಜೊತೆ ಸಂಬಂಧಿಕರ ಮದುವೆಗೆ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಎಕ್ಸ್ಪ್ರೆಸ್ವೇ ಎಕ್ಸಿಟ್ ಬಳಿ ಬಸ್ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿಯಾಗಿತ್ತು. ಡಿಕ್ಕಿ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದಿತ್ತು.
ವೃದ್ಧ ದಂಪತಿ ಸೀಟ್ ಬೆಲ್ಟ್ ಧರಿಸಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.



