ವಿಜಯಸಾಕ್ಷಿ ಸುದ್ದಿ, ಧಾರವಾಡ: ಬರುವ ಜನವರಿ 26 ರಂದು ಜರುಗುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಪೊಲೀಸ್, ಶಿಕ್ಷಣ ಹಾಗೂ ಇತರ ಇಲಾಖೆಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಹೇಳಿದರು.
ಅವರು ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ಆಚರಣೆಯ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣರಾಜ್ಯೋತ್ಸವದಂದು ಬೆಳಿಗ್ಗೆ 7.30 ಗಂಟೆಗೆ ಶಾಲಾ-ಕಾಲೇಜುಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8.30 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು, ಸರಕಾರಿ ನೌಕರರು ಸೇರಬೇಕು. 8.55 ಗಂಟೆಗೆ ಮುಖ್ಯ ಅತಿಥಿಗಳಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. 9 ಗಂಟೆಗೆ ಮುಖ್ಯ ಅತಿಥಿಗಳಿಂದ ರಾಷ್ಟ್ರೀಯ ಧ್ವಜಾರೋಹಣ ಮತ್ತು ವಿವಿಧ ದಳಗಳ ವೀಕ್ಷಣೆ ಜರುಗುತ್ತದೆ.
ಬೆಳಿಗ್ಗೆ 9.15 ಗಂಟೆಗೆ ಮುಖ್ಯ ಅತಿಥಿಗಳಾದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತಾರೆ. ನಂತರ ಸಚಿವರು ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸುತ್ತಾರೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿದ್ದ ಎಎಸ್ಪಿ ನಾರಾಯಣ್ ಬರಮನಿ ಅವರು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಸಹಾಯ ಪೊಲೀಸ್ ಆಯುಕ್ತರಾದ ವಿಜಯಕುಮಾರ್ ಟಿ, ಪ್ರಶಾಂತ ಸಿದ್ದನಗೌಡರ, ಲೋಕೋಪಯೋಗಿ, ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ, ಪದವಿಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಿಗೆ ಗೌರವ ರಕ್ಷೆ ನೀಡುವ ವಿದ್ಯಾರ್ಥಿ ಹಾಗೂ ವಿವಿಧ ಇಲಾಖೆಗಳ ದಳಗಳ ಆಯ್ಕೆ ಮತ್ತು ತರಬೇತಿಯನ್ನು ಪೊಲೀಸ್ ಇಲಾಖೆಯಿಂದ ಮಾಡಲಾಗುತ್ತದೆ. ಕ್ರೀಡಾಂಗಣ ಸಿದ್ಧತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದ್ದು, ಎಲ್ಲರೂ ಅಚ್ಚುಕಟ್ಟಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ತಿಳಿಸಿದರು.