HomeIndia News‘ಚಂದ್ರನ ಅಂಗಳ ತಲುಪಿದರೂ ಜಾತಿ ವ್ಯವಸ್ಥೆ ಜೀವಂತ’: ಬಾಂಬೆ ಹೈಕೋರ್ಟ್ ವಿಷಾದ

‘ಚಂದ್ರನ ಅಂಗಳ ತಲುಪಿದರೂ ಜಾತಿ ವ್ಯವಸ್ಥೆ ಜೀವಂತ’: ಬಾಂಬೆ ಹೈಕೋರ್ಟ್ ವಿಷಾದ

For Dai;y Updates Join Our whatsapp Group

ಮುಂಬೈ: ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಸಾಧನೆಗಳನ್ನು ಮಾಡುತ್ತಾ ಚಂದ್ರನತ್ತ ತಲುಪಿದ್ದರೂ, ಸಮಾಜದಲ್ಲಿ ಜಾತಿ ವ್ಯವಸ್ಥೆಯಂತಹ ಸಾಮಾಜಿಕ ಪಿಡುಗುಗಳು ಇನ್ನೂ ಮುಂದುವರಿದಿರುವುದು ವಿಷಾದಕರ ಎಂದು ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮ್ಯಾನುಯಲ್ ಸ್ಕ್ಯಾವೆಂಜಿಂಗ್ (ಮಲಮೂತ್ರವನ್ನು ಕೈಯಿಂದ ಸ್ವಚ್ಛಗೊಳಿಸುವ ಅಮಾನವೀಯ ಪದ್ಧತಿ) ವೇಳೆ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಪಾಯಕಾರಿ ಸ್ವಚ್ಛತಾ ಕಾರ್ಯದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡುವ ಹೊಣೆಗಾರಿಕೆಯನ್ನು ಖಾಸಗಿ ಸಂಸ್ಥೆಗಳು ಮತ್ತು ಉದ್ಯೋಗದಾತರ ಮೇಲೆ ಮಾತ್ರ ಹೊರಿಸುವ ಮಹಾರಾಷ್ಟ್ರ ಸರ್ಕಾರದ ನೀತಿಯ ಒಂದು ಭಾಗವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಖಾಸಗಿ ಸಂಸ್ಥೆಗಳು ಅಥವಾ ಗುತ್ತಿಗೆದಾರರ ಮೂಲಕ ಕೆಲಸ ಮಾಡುವ ಕಾರ್ಮಿಕರ ನಡುವೆ ಪರಿಹಾರದ ವಿಚಾರದಲ್ಲಿ ತಾರತಮ್ಯ ಮಾಡುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 2013ರ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಕಾಯ್ದೆ, ಕಾರ್ಮಿಕರು ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಆಧಾರದ ಮೇಲೆ ಯಾವುದೇ ಭೇದಭಾವ ಮಾಡುವುದಿಲ್ಲ ಎಂದು ಪೀಠ ಹೇಳಿದೆ.

ಅಪಾಯಕಾರಿ ಸ್ವಚ್ಛತಾ ಕಾರ್ಯದಲ್ಲಿ ಮೃತಪಟ್ಟ ಕಾರ್ಮಿಕರ ಅವಲಂಬಿತರಿಗೆ ರಾಜ್ಯ ಸರ್ಕಾರವೇ ತಕ್ಷಣ ಪರಿಹಾರ ನೀಡಬೇಕೆಂದೂ, ಬಳಿಕ ಅಗತ್ಯವಿದ್ದರೆ ಸಂಬಂಧಪಟ್ಟ ಖಾಸಗಿ ಸಂಸ್ಥೆ ಅಥವಾ ಉದ್ಯೋಗದಾತರಿಂದ ಆ ಮೊತ್ತವನ್ನು ವಸೂಲಿ ಮಾಡಿಕೊಳ್ಳಬಹುದೆಂದೂ ಹೈಕೋರ್ಟ್ ನಿರ್ದೇಶಿಸಿದೆ.

ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಈಗಾಗಲೇ ಐವರು ಖಾಸಗಿ ಸ್ವಚ್ಛತಾ ಕಾರ್ಮಿಕರ ಕುಟುಂಬಗಳಿಗೆ ಈ ಪರಿಹಾರ ನೀಡಲು ಸೂಚಿಸಲಾಗಿದ್ದು, 2013ರ ಕಾಯ್ದೆಯ ವ್ಯಾಪ್ತಿಗೆ ಬರುವ ಅಪಾಯಕಾರಿ ಸ್ವಚ್ಛತಾ ಕಾರ್ಯದಲ್ಲಿ ಮೃತಪಟ್ಟ ಎಲ್ಲರನ್ನೂ ಗುರುತಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. ಈ ಗುರುತಿಸುವಿಕೆ ಪ್ರಕ್ರಿಯೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಪೀಠ ಆದೇಶಿಸಿದೆ.

ಜಾತಿ ವ್ಯವಸ್ಥೆಯಿಂದ ಸಮಾಜದ ನಿರ್ದಿಷ್ಟ ವರ್ಗದ ಜನರು ತಲತಲಾಂತರಗಳಿಂದ ಮಾನವ ಘನತೆಗೆ ವಿರುದ್ಧವಾದ ಕೆಲಸ ಮಾಡಲು ಒತ್ತಾಯಿಸಲ್ಪಡುತ್ತಿರುವುದು ಕಳವಳಕಾರಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸಂವಿಧಾನ ಜಾರಿಗೆ ಬಂದು 75 ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಶತಮಾನಗಳಿಂದ ಸಮಾಜವನ್ನು ಕಾಡುತ್ತಿರುವ ಜಾತಿ ವ್ಯವಸ್ಥೆಯಂತಹ ಸಾಮಾಜಿಕ ಪಿಡುಗಿನಿಂದ ದೇಶ ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ ಎಂದು ಪೀಠ ವಿಷಾದಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img