ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಸೋಮವಾರ ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ವಾದ ಆಲಿಸಿದ ಸಿಜೆಐ, “ಈ ವಿಷಯದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಕಾಣಿಸುತ್ತಿಲ್ಲ. ಇದನ್ನು ಅತಿಯಾಗಿ ಭಾವನಾತ್ಮಕವಾಗಿ ಪರಿಗಣಿಸುವ ಅಗತ್ಯವೂ ಇಲ್ಲ” ಎಂದು ಅಭಿಪ್ರಾಯಪಟ್ಟರು.
ಜೊತೆಗೆ, ಸಾಮಾನ್ಯ ನ್ಯಾಯಾಂಗ ಪ್ರಕ್ರಿಯೆಯಂತೆ ಸೂಕ್ತ ಸಮಯದಲ್ಲಿ ಅರ್ಜಿಯನ್ನು ಪರಿಶೀಲಿಸಲಾಗುವುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಈ ಹಿಂದೆ ನ್ಯಾಯಾಲಯದಲ್ಲಿ ಬಳಸಿದ್ದ ‘ಜಿರಳೆ’ ಎಂಬ ರೂಪಕದ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಮಾಧ್ಯಮಗಳು ತಪ್ಪು ರೀತಿಯಲ್ಲಿ ಬಿಂಬಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ನನ್ನ ಹೇಳಿಕೆಯನ್ನು ಸಂಪೂರ್ಣವಾಗಿ ತಪ್ಪಾಗಿ ಅರ್ಥೈಸಲಾಗಿದೆ. ನಕಲಿ ಹಾಗೂ ಬೋಗಸ್ ಪದವಿಗಳನ್ನು ಬಳಸಿಕೊಂಡು ಕಾನೂನು ವೃತ್ತಿಗೆ ಪ್ರವೇಶಿಸುತ್ತಿರುವ ಅಕ್ರಮ ಜಾಲವನ್ನು ಟೀಕಿಸಲು ಮಾತ್ರ ಆ ಪದವನ್ನು ಬಳಸಿದ್ದೆ. ಅದು ದೇಶದ ನಿರುದ್ಯೋಗಿ ಯುವಕರನ್ನು ಉದ್ದೇಶಿಸಿ ಅಲ್ಲ,” ಎಂದು ಸಿಜೆಐ ಸ್ಪಷ್ಟನೆ ನೀಡಿದರು.
ವಕೀಲ ರಾಜಾ ಚೌಧರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿರಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ರಹಸ್ಯ ಚಟುವಟಿಕೆಗಳು ಹಾಗೂ ದೇಶಾದ್ಯಂತ ಸಕ್ರಿಯವಾಗಿರುವ ನಕಲಿ ಪದವಿ ಕಾನೂನು ವೃತ್ತಿ ಜಾಲದ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು.
ಇದಲ್ಲದೆ, ನ್ಯಾಯಾಲಯದ ನೇರ ಪ್ರಸಾರದ ವಿಡಿಯೋ ಹಾಗೂ ಆಡಿಯೋ ತುಣುಕುಗಳನ್ನು ಕತ್ತರಿಸಿ ಮೀಮ್ಸ್ ರೂಪದಲ್ಲಿ ವಾಣಿಜ್ಯ ಮತ್ತು ವೈಯಕ್ತಿಕ ಪ್ರಚಾರಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ತಕ್ಷಣವೇ ಕಾನೂನು ರೂಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.



