ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ, ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮ್ಮ ವಹಿಸಿದ ಕೆಲಸವನ್ನು ನಿರ್ವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕೆಂದು ಸೂಚಿಸಿದರು.

ಪ್ರತಿ ವರ್ಷದಂತೆ, ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ಹಿಂದಿನ ದಿನ ಹಾಗೂ ದಿನಾಂಕದಲ್ಲಿ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು.

ಅಂದು ಬೆಳಿಗ್ಗೆ 7:30ಕ್ಕೆ ಗದಗ-ಬೆಟಗೇರಿ ನಗರಸಭೆ ಪದವಿಪೂರ್ವ ಕಾಲೇಜು ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ.

ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು.
ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ, ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಪಡೆ, ಹೋಮ್‌ಗಾರ್ಡ್, ಭಾರತ ಸೇವಾ ದಳಗಳಿಂದ ಪರೇಡ್ ಮತ್ತು ಪಥ ಸಂಚಲನ ಜರುಗಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು.
ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳವರು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ. ನಂದಾ ಹಣಬರಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಮಾತನಾಡಿ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನ ಮತ್ತು ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.


Spread the love

LEAVE A REPLY

Please enter your comment!
Please enter your name here