HomeKarnataka Newsಜನಗಣತಿ ರಾಷ್ಟ್ರೀಯ ಕರ್ತವ್ಯ: ಖಾಸಗಿ ಶಾಲಾ ಸಿಬ್ಬಂದಿಯೂ ಪಾಲ್ಗೊಳ್ಳಬೇಕು - ಹೈಕೋರ್ಟ್ ಸೂಚನೆ

ಜನಗಣತಿ ರಾಷ್ಟ್ರೀಯ ಕರ್ತವ್ಯ: ಖಾಸಗಿ ಶಾಲಾ ಸಿಬ್ಬಂದಿಯೂ ಪಾಲ್ಗೊಳ್ಳಬೇಕು – ಹೈಕೋರ್ಟ್ ಸೂಚನೆ

For Dai;y Updates Join Our whatsapp Group

Spread the love

ಬೆಂಗಳೂರು: ಜನಗಣತಿ ರಾಷ್ಟ್ರೀಯ ಕರ್ತವ್ಯವಾಗಿದ್ದು, ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ರಜೆಯಲ್ಲಿರುವ ಶಿಕ್ಷಕರನ್ನು ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿ, ಗಣತಿ ಕಾರ್ಯದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡುವಂತೆ ನಗರದ ಖಾಸಗಿ ಶಾಲೆಯ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದೆ.

ಜೆ.ಪಿ. ನಗರದ 7ನೇ ಹಂತದಲ್ಲಿರುವ ‘ದಿ ಬ್ರಿಗೇಡ್ ಶಾಲೆ’ ಪ್ರಾಂಶುಪಾಲ ಶುಭಾರ್ ಜೈನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ಅವರಿದ್ದ ಪೀಠ ಈ ಆದೇಶ ನೀಡಿದೆ.

ಇದಲ್ಲದೆ, ಮುಂದಿನ ಒಂದು ವಾರದೊಳಗೆ ಎಲ್ಲ ಶಿಕ್ಷಕರನ್ನು ಹಿಂದಿರುಗುವಂತೆ ಸೂಚಿಸಿ, ಜನಗಣತಿ ಆಯುಕ್ತರ ಮುಂದೆ ವರದಿ ಮಾಡಿಸುವುದನ್ನು ಖಚಿತಪಡಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ. ಈ ಷರತ್ತಿನ ಆಧಾರದಲ್ಲಿ ಪ್ರಾಂಶುಪಾಲರ ವಿರುದ್ಧ ಜನಗಣತಿ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸುವ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.

ವಿಚಾರಣೆ ವೇಳೆ ನ್ಯಾಯಪೀಠ, “ಸುಮಾರು 10ರಿಂದ 11 ವರ್ಷಗಳಿಗೊಮ್ಮೆ ನಡೆಯುವ ಜನಗಣತಿ ಅತ್ಯಂತ ಮಹತ್ವದ ರಾಷ್ಟ್ರೀಯ ಕಾರ್ಯ. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಸಹಕರಿಸದಿದ್ದರೆ ಸರ್ಕಾರ ಈ ಕಾರ್ಯ ಪೂರ್ಣಗೊಳಿಸುವುದು ಹೇಗೆ?” ಎಂದು ಪ್ರಶ್ನಿಸಿತು.

ಮುಂದಿನ ವಿಚಾರಣೆಯ ವೇಳೆ ಶಾಲೆಯಲ್ಲಿ ಲಭ್ಯವಿರುವ ಶಿಕ್ಷಕರ ಸಂಪೂರ್ಣ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ಹಿನ್ನೆಲೆ:
ದೇಶಾದ್ಯಂತ 2026ರ ಜನಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತ ಏಪ್ರಿಲ್ 1ರಿಂದ ಸ್ವಯಂ ಗಣತಿಯೊಂದಿಗೆ ಶುರುವಾಗಿದೆ. ಎರಡನೇ ಹಂತದಲ್ಲಿ ಏಪ್ರಿಲ್ 16ರಿಂದ ಗಣತಿದಾರರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಗಣತಿ ಪೂರ್ಣಗೊಳ್ಳಬೇಕಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಪ್ರಧಾನ ಜನಗಣತಿ ಅಧಿಕಾರಿ ಏಪ್ರಿಲ್ 9ರಂದು ದಿ ಬ್ರಿಗೇಡ್ ಶಾಲೆಗೆ ಪತ್ರ ಬರೆದು ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸುವಂತೆ ಸೂಚಿಸಿದ್ದರು. ಇದನ್ನು ಪ್ರಶ್ನಿಸಿ ಶಾಲೆ ಹೈಕೋರ್ಟ್ ಮೆಟ್ಟಿಲೇರಿತ್ತು.

ಅರ್ಜಿದಾರರ ಪರ ವಕೀಲರು, ಶಾಲೆಯ 84 ಶಿಕ್ಷಕರನ್ನು ನಿಯೋಜಿಸಬಹುದಾದರೂ, ಹಲವರು ಬೇಸಿಗೆ ರಜೆ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಲ್ಲಿದ್ದಾರೆ. ಈಗಾಗಲೇ 12 ಮಂದಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಶಾಲೆಯಲ್ಲಿ ಎಷ್ಟು ಮಂದಿ ಶಿಕ್ಷಕರು ಲಭ್ಯವಿದ್ದಾರೆ ಎಂಬುದರ ಸ್ಪಷ್ಟ ಮಾಹಿತಿ ಅಗತ್ಯವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!