ಚಾಮರಾಜನಗರ: ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ತನಿಖಾ ದಾಳಿಗಳನ್ನು ನಡೆಸುತ್ತಿದೆ, ಬಿಜೆಪಿಯವರ ಮೇಲೆ ಇಂತಹ ಕ್ರಮಗಳು ಕಾಣಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿದ ದಾಳಿ ಕುರಿತು ಪ್ರತಿಕ್ರಿಯಿಸಿ ಈ ಆರೋಪ ಮಾಡಿದರು.
ಮೂಢನಂಬಿಕೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಚಾಮರಾಜನಗರಕ್ಕೆ ಬಂದರೆ ಕುರ್ಚಿ ಹೋಗುತ್ತದೆ ಎಂಬ ಮಾತು ತಪ್ಪು. ನಾನು ಇಲ್ಲಿ ಹಲವು ಬಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಎಂದರು. ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಮೊದಲು ವಿರೋಧಿಸಿದ್ದವರೇ ಈಗ ಅದನ್ನು ಅನುಸರಿಸುತ್ತಿದ್ದಾರೆ. ಗ್ಯಾರಂಟಿಗಳು ಬಡವರ ಪರ ಯೋಜನೆಗಳೆಂಬುದು ಅವರಿಗೆ ಈಗ ಅರಿವಾಗಿದೆ ಎಂದು ಹೇಳಿದರು.
ನಾರಿ ಶಕ್ತಿ ವಂದನ್ ಮಸೂದೆ ಕುರಿತು ಬಿಜೆಪಿ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, ಮಹಿಳಾ ಮೀಸಲಾತಿಗೆ ವಿರೋಧಿಗಳು ಬಿಜೆಪಿಯವರೇ. ರಾಜೀವ್ ಗಾಂಧಿ ಅವಧಿಯಲ್ಲಿ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತರಲಾಗಿತ್ತು. ಆದರೆ ಅದನ್ನು ರಾಜ್ಯಸಭೆಯಲ್ಲಿ ತಡೆದವರು ಬಿಜೆಪಿಯವರೇ ಎಂದು ಹೇಳಿದರು. ನಮ್ಮ ವಿರೋಧ ಕ್ಷೇತ್ರ ಮರುವಿಂಗಡಣೆಗೆ ಮಾತ್ರ, ಮಹಿಳಾ ಮೀಸಲಾತಿಗೆ ಅಲ್ಲ ಎಂದು ಸ್ಪಷ್ಟಪಡಿಸಿದರು.
ತೃತೀಯ ಭಾಷೆಗೆ ಅಂಕ ನೀಡುವ ವಿಚಾರದಲ್ಲಿ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು. ಹಿಂದಿನ ವರ್ಷಗಳಂತೆ ಮೌಲ್ಯಮಾಪನ ಮಾಡಿ ಅಂಕ ನೀಡಬೇಕು ಎಂದು ಉಚ್ಚ ನ್ಯಾಯಾಲಯ ಸೂಚಿಸಿರುವುದಾಗಿ ಹೇಳಿದರು.
ಅಲ್ಪಸಂಖ್ಯಾತರು ಹೈಕಮಾಂಡ್ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ನಿರ್ಧಾರ ಕೈಗೊಳ್ಳುವಾಗ ಅವರೇ ಉಪಸ್ಥಿತರಿದ್ದರು. ನಂತರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಇದೇ ವೇಳೆ, ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.



