ವಿಜಯಸಾಕ್ಷಿ ಸುದ್ದಿ, ಮುಳಗುಂದ: ಉತ್ತಮ ಆರೋಗ್ಯ ವೃದ್ಧಿಗೆ ಸಿರಿಧಾನ್ಯ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಅವರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಮೊದಲಿನಿಂದಲೂ ಸಿರಿಧಾನ್ಯಕ್ಕೆ ಬಳಕೆಯಿಂದ ಉತ್ತಮ ಆರೋಗ್ಯವಂತ ಬದುಕು ಸಾಗಿಸುತ್ತಿದ್ದರು. ಇಂದು ಆಧುನಿಕ ಭರಾಟೆಯಲ್ಲಿ ಸಿರಿಧಾನ್ಯ ಬಳಕೆ ಕಡಿಮೆಯಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಸಿರಿಧಾನ್ಯ ನಿತ್ಯ ಬಳಕೆಯಿಂದ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.
ಗದಗ ಜಂಟಿ ಕೃಷಿ ಅಧಿಕಾರಿ ಚೇತನಾ ಪಾಟೀಲ ಮಾತನಾಡಿ, ಜನರ ಆರೋಗ್ಯ ಕಾಪಾಡುವಲ್ಲಿ ಸಿರಿಧಾನ್ಯಗಳ ಬಳಕೆ ಮತ್ತು ಖಾದ್ಯಗಳ ತಯಾರಿಕೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಸಿರಿಧಾನ್ಯಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು, ಹೃದಯದ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಸಹಕಾರಿ ಎಂದರು.
ಗದಗ ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವಣ್ಣವರ ಮಾತನಾಡಿ, ಸಿರಿಧಾನ್ಯಗಳಾದ ರಾಗಿ, ಜೋಳ, ಸಜ್ಜೆ, ನವಣೆ, ಗೊರಲು ಇವುಗಳಲ್ಲಿ ಸಾಕಷ್ಟು ಪೋಷಕಾಂಶಗಳು ಅಡಕವಾಗಿರುವುದರಿಂದ ನಿತ್ಯ ಆಹಾರದಲ್ಲಿ ಬಳಸಿದಲ್ಲಿ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.
ಪ.ಪA ಆವರಣದಿಂದ ಬಾಲಲೀಲಾ ಮಾಹಾಂತ ಶಿವಯೋಗಿಗಳ ಗವಿಮಠ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿರಿಧಾನ್ಯಗಳ ಕುರಿತು ಜಾಥಾ ಹಮ್ಮಿಕೊಳ್ಳಲಾಯಿತು. ಎಸ್.ಎಂ. ನೀಲಗುಂದ, ಕೆ.ಎಲ್. ಕರಿಗೌಡರ, ಜೆಡಿಎ ಚೇತನಾ ಪಾಟೀಲ, ಡಿಡಿಎ ಜಿ.ಎಸ್. ಸ್ಪೂರ್ತಿ, ಎಡಿ ಮಲ್ಲಯ್ಯ ಕೊರವಣ್ಣವರ, ಎಸ್.ಸಿ. ಬಡ್ನಿ ಹಾಗೂ ಜಿಲ್ಲಾ ಕೃಷಿ ಇಲಾಖೆ ಸಿಬ್ಬಂದಿಗಳು ಇದ್ದರು.



