ವಿಜಯಸಾಕ್ಷಿ ಸುದ್ದಿ, ಗದಗ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ 18 ವರ್ಷದ ಯುವತಿ ಅಶ್ವಿನಿ ತಿಪ್ಪಾರೆಡ್ಡಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಗದಗ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಯುವತಿಯನ್ನು ನಾಲ್ವರು ದುಷ್ಕರ್ಮಿಗಳು ಹಿಂಬಾಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಅಮಾನವೀಯ ಘಟನೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಮಹಾಸಭಾ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು.
ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟೆಚ್ಚರ ವಹಿಸಬೇಕು. ಅತ್ಯಾಚಾರ, ಕೊಲೆ ಸೇರಿದಂತೆ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಾರಣರಾಗುವವರಿಗೆ ಕಾನೂನಿನಡಿ ಮತ್ತಷ್ಟು ಕಠಿಣ ಶಿಕ್ಷೆ ವಿಧಿಸಬೇಕು. ತಪ್ಪಿತಸ್ಥರಿಗೆ ಯಾವುದೇ ರೀತಿಯ ಕಾನೂನು ಸಡಿಲಿಕೆ ಅಥವಾ ಅನುಕೂಲ ಕಲ್ಪಿಸಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅತ್ಯಾಚಾರ ಸಂತ್ರಸ್ತರಿಗೆ ಉಚಿತ ಕಾನೂನು ನೆರವು ಒದಗಿಸುವುದರೊಂದಿಗೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಸಂತ್ರಸ್ತ ಕುಟುಂಬಕ್ಕೆ ಅಗತ್ಯ ಕಾನೂನು ರಕ್ಷಣೆ ನೀಡಬೇಕು ಎಂದು ಮಹಾಸಭಾ ಆಗ್ರಹಿಸಿದೆ.
ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಕಡೆಮನಿ, ಜಿಲ್ಲಾಧ್ಯಕ್ಷ ಆನಂದ ಶಿಂಗಾಡಿ, ಶಂಭು ಹುನಗುಂದ, ಅನಿಲ ಕಾಳೆ, ಮುತ್ತು ಬಿಳೆಯಲಿ, ದಸಂಸ ಅಂಬೇಡ್ಕರ್ವಾದ ಜಿಲ್ಲಾ ಸಂಚಾಲಕ ಬಾಲರಾಜ ಅರಬರ, ಸಹಸಂಚಾಲಕ ನಾಗರಾಜ ಗೋಕಾವಿ, ಪರಶು ಕಾಳೆ, ಮಂಜುನಾಥ ಹಗೆದಾಳ, ವಿನಾಯಕ ತಿಮ್ಮಾಪೂರ, ಬಸವರಾಜ ಬಿಳೆಯಲಿ, ಶ್ರೀಕಾಂತ ಮಳಲಿ, ರಾಘವೇಂದ್ರ ಮಿಟ್ಟಿ, ಶರೀಫ್ ಬಿಳೆಯಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



