ನವದೆಹಲಿ: ದೇಶದ ಹಿರಿಯ ರಾಜಕೀಯ ಮುತ್ಸದ್ಧಿಗಳಲ್ಲಿ ಒಬ್ಬರಾದ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿ ರಾಜ್ಯಸಭೆಗೆ ತೆರಳಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಬಿಜೆಪಿ ನಾಯಕನೊಬ್ಬರು ಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದು, ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದೆ.
75 ವರ್ಷದ ನಿತೀಶ್ ಕುಮಾರ್ ಅವರು 10 ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದಾಖಲೆ ಹೊಂದಿದ್ದಾರೆ. ಜಿತನ್ ರಾಮ್ ಮಾಂಝಿ ಮುಖ್ಯಮಂತ್ರಿಯಾಗಿದ್ದ ಅಲ್ಪಾವಧಿಯನ್ನು ಹೊರತುಪಡಿಸಿದರೆ, 2015ರಿಂದ ಅವರು ನಿರಂತರವಾಗಿ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಮಹಾಘಟಬಂಧನದಲ್ಲಿದ್ದ ಅವರು ಬಳಿಕ ಎನ್ಡಿಎ ಸೇರಿಕೊಂಡಿದ್ದರು.
2025ರ ವಿಧಾನಸಭಾ ಚುನಾವಣೆಗೆ ಮುನ್ನವೇ ನಾಯಕತ್ವ ಬದಲಾವಣೆ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿದ್ದರೂ, ಪಕ್ಷದಲ್ಲಿ ಅವರಷ್ಟೇ ವರ್ಚಸ್ಸುಳ್ಳ ನಾಯಕನಿಲ್ಲದಿರುವುದು ಹಾಗೂ ಅವರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ಎನ್ಡಿಎ ಆತುರದ ನಿರ್ಧಾರ ಕೈಗೊಂಡಿರಲಿಲ್ಲ. 2025ರ ಚುನಾವಣೆಯನ್ನು ಅವರ ನೇತೃತ್ವದಲ್ಲೇ ಎದುರಿಸಿ ಒಕ್ಕೂಟ ಜಯಗಳಿಸಿದ ಬಳಿಕ ಅವರು ಮತ್ತೊಮ್ಮೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಲೋಕಸಭೆಯಲ್ಲಿ ಪ್ರಭಾವಿ ನಾಯಕರಾಗಿದ್ದ ಅವರು 1990ರಲ್ಲಿ ವಿ.ಪಿ. ಸಿಂಗ್ ಸರ್ಕಾರದಲ್ಲಿ ಕೃಷಿ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 1998ರಿಂದ 2003ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಭೂ ಸಾರಿಗೆ, ಕೃಷಿ ಹಾಗೂ ರೈಲ್ವೆ ಖಾತೆಗಳ ಕೇಂದ್ರ ಸಚಿವರಾಗಿದ್ದರು.
ಮುಖ್ಯಮಂತ್ರಿ ಹುದ್ದೆ ತ್ಯಜಿಸಿದ ಬಳಿಕ ಅವರು ರಾಜ್ಯಸಭೆಯ ಮೂಲಕ ದೆಹಲಿ ರಾಜಕೀಯಕ್ಕೆ ಮರುಪ್ರವೇಶಿಸಿದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿ ಅವಕಾಶ ಸಿಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹಿರಿಯ ನಾಯಕನಾದ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಕ್ಕರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.



