ಬೆಳಗಾವಿ: ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದಿರುವ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಡಿಸಿಎಂ ಈ ರೀತಿ ಹೇಳಿದರು.
ಬಿಜೆಪಿಯವರು ದ್ವೇಷ ಭಾಷಣದ ಪಿತಾಮಹರು
ದ್ವೇಷ ಭಾಷಣ ತಡೆ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿವವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದರು. ದ್ವೇಷ ಮಾಡಣ ಮಾಡದೇ ಹೋದರೆ ಸಮಸ್ಯೆಯೇ ಇರುವುದಿಲ್ಲವಲ್ಲ. ಸಂವಿಧಾನದ ರಕ್ಷಣೆಗೆ ನಾವು ಈ ಕ್ರಮ ಕೈಗೊಂಡಿದ್ದೇವೆ” ಎಂದು ತಿಳಿಸಿದರು.
ಬ್ಯಾಲೆಟ್ ಇದ್ದಾಗ ಮತ ಕಳ್ಳತನ ಹೇಗೆ ಸಾಧ್ಯ?
ನೆಹರು ಹಾಗೂ ಇಂದಿರಾ ಗಾಂಧಿ ಅವರು ಮತ ಕಳ್ಳತನ ಮಾಡಿದ್ದರು ಎಂಬ ಅಮಿತ್ ಶಾ ಹೇಳಿಕೆ ಬಗ್ಗೆ ಕೇಳಿದಾಗ, “ಅಮಿತ್ ಶಾ ಅವರು ಈ ಬಗ್ಗೆ ಕನಿಷ್ಟ ಜ್ಞಾನ ಹೊಂದಿರಬೇಕು. ಅವರ ಕಾಲದಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿತ್ತು. ಹೀಗಿರುವಾಗ ಮತ ಕಳ್ಳತನ ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು.



