ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ತಾಲೂಕಿನ ರಾಜೂರಿನ ಶ್ರೀ ಬಸವೇಶ್ವರ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ.ಬಿ. ಬೆನಕನವಾರಿ ಮಾತನಾಡಿ, ಮಕ್ಕಳು ಮಾನಸಿಕವಾಗಿ ಸದೃಢವಾಗಲು ಹಾಗೂ ಅವರಲ್ಲಿನ ಬೌದ್ಧಿಕ ಪ್ರಜ್ಞೆ ವಿಕಸಿತಗೊಳ್ಳಲು ಮಕ್ಕಳಿಗೆ ನಮ್ಮ ತಲೆಮಾರು, ಪರಂಪರೆ ಅನುಭವಿಸುವ ವಾತಾವರಣ ಕಲ್ಪಿಸುವುದು ಅನಿವಾರ್ಯ. ಆದರೆ ನಗರೀಕರಣದ ಬೆಳವಣಿಗೆಯಲ್ಲಿ ಮಕ್ಕಳು ತಮಗೆ ಬಾಲ್ಯದಲ್ಲಿ ಸಿಗಬೇಕಾದ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಶ್ರೀ ಬಸವೇಶ್ವರ ಕಿರಿಯ ಪ್ರಾಥಮಿಕ ಶಾಲೆಯು ಬೇಸಿಗೆ ಶಿಬಿರವನ್ನು ಏರ್ಪಡಿಸಿ ಮಕ್ಕಳಿಗೆ ಅಕ್ಷರ ಜ್ಞಾನದ ಜೊತೆಗೆ ಸಂಸ್ಕೃತಿ, ಪರಂಪರೆಯನ್ನು ಪರಿಚಯ ಮಾಡಿಸುತ್ತಿರುವುದು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.
ಮುಖ್ಯ ಅತಿಥಿ ಜಿ.ಜಿ. ವ್ಯಾಪಾರಿ ಮಾತನಾಡಿ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರತರಲು ಇಂತಹ ಬೇಸಿಗೆ ಶಿಬಿರಗಳು ಸಹಾಯಕಾರಿಯಾಗಲಿವೆ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಲು ವೇದಿಕೆ ಕಲ್ಪಿಸಿ ಕೊಟ್ಟಂತಾಗಿದೆ. ಶಿಬಿರದಲ್ಲಿ ಪಡೆದ ಪಠ್ಯಕ್ರಮದ ತರಬೇತಿ ಮಕ್ಕಳ ಜ್ಞಾನದ ಮೇಲೆ ಸಾಕಷ್ಟು ಸಕರಾತ್ಮಕ ಪರಿಣಾಮ ಬೀರಲಿದೆ ಎಂದರು.
ಎಸ್.ಕೆ. ಬೆನಕನವಾರಿ ಮಾತನಾಡಿ, ಮಕ್ಕಳ ಮನಸ್ಸು ವಿಕಾಸಗೊಳ್ಳಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪೋಷಕರು ಆದ್ಯತೆ ಕೊಡಬೇಕು. ಇಂದಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕ ಗಳಿಸಬೇಕು ಎಂದು ಆಶಿಸುತ್ತಾರೆ. ಆದರೆ ಅವರ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ಗಮನವೇ ಹರಿಸುವುದು ಕಡಿಮೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಶಿಬಿರದ ವಿದ್ಯಾರ್ಥಿನಿ ಸಾವಿತ್ರಿ ಬೆನಕನವಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸ್ಮಿತಾ ಪಾಟೀಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ನಿಂಗಪ್ಪ ಹಕಪ್ಪರದ ಸ್ವಾಗತಿಸಿದರು. ಪುಟ್ಟರಾಜ ಕಡಬಲಕಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಹರ್ಷಾ ಜೋಗಿನ್ ವಂದಿಸಿದರು.