ಮಂಗಳೂರು: ಧರ್ಮಸ್ಥಳದಲ್ಲಿ ‘ನೂರಾರು ಮಹಿಳೆಯರ ಶವಗಳನ್ನು ಹೂಳಲಾಗಿದೆ’ ಎಂಬ ಆಘಾತಕಾರಿ ಸುಳ್ಳು ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್ಐಟಿ ದೃಢಪಡಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ ಎಸ್ಐಟಿ ನ.20 ರಂದು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು. ಈ ತನಿಖಾ ವರದಿಯಲ್ಲಿ 6 ಮಂದಿ ಯಾವ ರೀತಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾರೆ ಎಂಬುದನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ.
ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು. ಚಿನ್ನಯ್ಯನಿಗೆ ಮೊದಲಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ.
ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು.
SIT ಸಲ್ಲಿಸಿರುವ ಪ್ರಾಥಮಿಕ ವರದಿಯು, ಧರ್ಮಸ್ಥಳದ ವ್ಯವಸ್ಥಾಪಕರಿಗೆ ಮತ್ತು ಮೇಲ್ವಿಚಾರಕರಿಗೆ ಕ್ಲೀನ್ಚಿಟ್ ನೀಡಿದ್ದು, ಧರ್ಮಸ್ಥಳದಲ್ಲಿ ಅಂತಹ ಯಾವುದೇ ಕೃತ್ಯಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಶ್ರೀಕ್ಷೇತ್ರದ ಕುರಿತು ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದೆ. ಇನ್ನು ಈ ವರದಿಯ ಪ್ರಕಾರ, ಇದು ಆರು ಮಂದಿ ಆರೋಪಿಗಳು ನಡೆಸಿರುವ ಸಂಪೂರ್ಣ ಅಪರಾಧ ಒಳಸಂಚು ಎಂಬುದು ಧೃಡಪಟ್ಟಿದೆ.



