ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (PNRF)ಯಿಂದ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ, ಗಾಯಗೊಂಡವರಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಗೊರ್ಲತ್ತು ಕ್ರಾಸ್ ಬಳಿ ಮುಂಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



