4 ತಿಂಗಳು ನಗರ ಸಾರಿಗೆ ನಿಲ್ದಾಣ ಬಂದ್

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಶೇ.50ರಷ್ಟು ಕಾಮಗಾರಿ ಮುಕ್ತಾಯಗೊಂಡಿದ್ದು, ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.

Advertisement

ಬುಧವಾರ ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ, ಸರ್ಕ್ಯೂಟ್ ಹೌಸನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹುಬ್ಬಳ್ಳಿ ನಗರದಲ್ಲಿ 2022ರಿಂದ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ವಿಜಯಪುರ ರಸ್ತೆಯ ಕಡೆಯಿಂದ (710 ಮೀ.), ಗದಗ ರಸ್ತೆಯಿಂದ (700 ಮೀ), ಚೆನ್ನಮ್ಮ ವೃತ್ತದಿಂದ ಹೊಸೂರ ವೃತ್ತದವರೆಗೆ (850 ಮೀ), ಗೋಕುಲ ರಸ್ತೆಯಲ್ಲಿ ಏರ್‌ಪೋರ್ಟ್ ಕಡೆಗೆ (689 ಮೀ), ಧಾರವಾಡ ರಸ್ತೆ ಕಡೆಗೆ (310 ಮೀ), ಹಾಗೂ 350 ಮೀ ಸೇರಿ ಒಟ್ಟು 3.600 ಕಿ.ಮೀ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಎಪ್ರೀಲ್ 20ರಿಂದ ಆಗಸ್ಟ 19ರವರೆಗೆ ಸುಮಾರು 4 ತಿಂಗಳ ಕಾಲ ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ (500 ಮೀ.), ವಿಜಯಪುರ ರಸ್ತೆಯಲ್ಲಿ ಚನ್ನಮ್ಮ ವೃತ್ತದಿಂದ ಕೋರ್ಟ್ ವೃತ್ತದವರೆಗೆ (150 ಮೀ.) ಹಾಗೂ ಚನ್ನಮ್ಮ ವೃತ್ತದಲ್ಲಿ ಆಯ್ದ ಭಾಗಗಳಲ್ಲಿ ಪಿಲ್ಲರ್ ಕಾಮಗಾರಿಗಳಿಗೆ ಬ್ಯಾರಿಕೇಡಿಂಗ್ ಮಾಡಲು ಚನ್ನಮ್ಮ ವೃತ್ತಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುವುದು.

ಚೆನ್ನಮ್ಮ ವೃತ್ತದಿಂದ ಬಸವವನದವರೆಗೆ ಹಾಗೂ ವಿಜಯಪುರ ರಸ್ತೆಯಲ್ಲಿ 80 ಗಿರ್ಡರ್ ಹಾಗೂ 16 ಸ್ಪಾನ್‌ಗಳ ಸ್ಲಾಬ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಚನ್ನಮ್ಮ ವೃತ್ತದಲ್ಲಿ ರೋಟರಿ ಕಾಮಗಾರಿಗಾಗಿ ಪೋರ್ಟ್ಲ್ ಕ್ಯಾಪ್ ಹಾಗೂ 8 ಪಿಯರ್‌ಗಳ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಸರ್ವಸಿದ್ಧತೆಯನ್ನು ಮಾಡಿಕೊಂಡಿದೆ. 4 ತಿಂಗಳ ಕಾಲ ನಗರ ಸಾರಿಗೆ ನಿಲ್ದಾಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ, ಡಿಸಿಪಿ ರವೀಶ ಸಿ.ಆರ್, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧೀಕ್ಷಕ ಅಭಿಯಂತರರಾದ ಟಿ.ಪ್ರದೀಪ ಪತ್ರಿಕಾಗೋಷ್ಠಿಯಲ್ಲಿದ್ದರು.

ಐಟಿ ಪಾರ್ಕ್ ಹತ್ತಿರದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ಸ್ಥಾಪಿಸಲಾಗುವುದು. ಅಲ್ಲದೇ ಉಪ ನಗರ ಬಸ್ ನಿಲ್ದಾಣವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ನಿರ್ವಹಣೆ ಹಾಗೂ ರಕ್ಷಣೆ ಮಾಡಬೇಕು. ವಿಜಯಪುರ ಮತ್ತು ಗದಗ ಹಾಗೂ ಉಳಿದ ಪ್ರದೇಶದಿಂದ ಬರುವ ಬಸ್ಸುಗಳಿಗೆ ಕಾರವಾರ ರಸ್ತೆ, ಸಿ.ಬಿ.ಟಿ. ಹಾಗೂ ಹೊಸೂರ ಬಸ್ ನಿಲ್ದಾಣಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಟ್ರಾಫಿಕ್ ಸಮಸ್ಯೆಯಾಗದಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


Spread the love

LEAVE A REPLY

Please enter your comment!
Please enter your name here