ಗದಗ: ಬಸ್ ನಿಲ್ಲಿಸದ ವಿಚಾರವಾಗಿ ವಿದ್ಯಾರ್ಥಿಗಳು ಹಾಗೂ ಸಾರಿಗೆ ನೌಕರರ ನಡುವೆ ನಡೆದ ವಾಗ್ವಾದ ಹಲ್ಲೆ ಆರೋಪದ ಮಟ್ಟಕ್ಕೆ ತಲುಪಿದ ಘಟನೆ ನಗರದಲ್ಲಿರುವ ಪುಟ್ಟರಾಜ್ ಗವಾಯಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದ್ದರೂ ಚಾಲಕ ಬಸ್ ನಿಲ್ಲಿಸಿಲ್ಲ ಎನ್ನಲಾಗಿದ್ದು, ಇದನ್ನು ಪ್ರಶ್ನಿಸಲು ಮುಂದಾದಾಗ ವಿದ್ಯಾರ್ಥಿಗಳು ಮತ್ತು ಸಾರಿಗೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ಉಂಟಾಗಿದೆ.
ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಲುಪಿದ್ದು, ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹಲ್ಲೆ ಮಾಡಿದ ನೌಕರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಶಹರ ಪೊಲೀಸ್ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳನ್ನು ಮನವೊಲಿಸಲು ಹರಸಾಹಸ ಪಟ್ಟರು. ಈ ನಡುವೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದರು.



