ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ, ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡರ ಗುರುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಭಾವದಲ್ಲಿ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದಡಿ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಅನುಷ್ಠಾನ ಮಾಡಲಾಗುತ್ತಿದೆ. ಅಭಿಯಾನದಲ್ಲಿ ಮೂರು ಅಂಶಗಳಿವೆ. ಸ್ವಚ್ಛತಾ ಕಿ ಭಾಗೇದಾರಿ, ಸಂಪೂರ್ಣ ಸ್ವಚ್ಛತೆ, ಸಫಾಯಿ ಕರ್ಮಚಾರಿಗಳ ಸುರಕ್ಷೆ ಹಾಗೂ ಕ್ಷೇಮಭಿವೃದ್ಧಿ ಕಾರ್ಯಕ್ರಮಗಳಿವೆ ಎಂದರು.
ಸಂಪೂರ್ಣ ಸ್ವಚ್ಛತೆ ಅಭಿಯಾನದಡಿಯಲ್ಲಿ ಮುಖ್ಯ ರಸ್ತೆಗಳ ಸ್ವಚ್ಛತಾ ಕಾರ್ಯವನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಾಲಾ ಬದಾಮಿ ರಸ್ತೆ ಅಂಬಾಭವಾನಿ ವೃತ್ತದವರೆಗೆ ಸಂಪೂರ್ಣ ಮುಖ್ಯ ರಸ್ತೆಗಳ ಸ್ವಚ್ಛತೆ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ವಚ್ಛತಾ ಕೀ ಭಾಗೇದಾರಿ ಅಭಿಯಾನದ ಅಡಿಯಲ್ಲಿ ತ್ರಿಕೋಟೇಶ್ವರ ದೇವಸ್ಥಾನ, ಭೀಷ್ಮ ಕೆರೆಯ ದಂಡೆ ಹಾಗೂ ಬೀದಿ ವ್ಯಾಪಾರಸ್ಥರಿಗೆ ಸ್ವಚ್ಛತಾ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಮ್.ಐ. ಹಿರೇಮನಿಪಾಟೀಲ, ಎಂ.ಬಿ. ಸಂಕದ, ಪೌರಾಯುಕ್ತ ಮಹೇಶ ಪೋತದಾರ, ನಗರಸಭೆ ಪರಿಸರ ಅಭಿಯಂತರ ಆನಂದ ಬದಿ, ಆರೋಗ್ಯ ನಿರೀಕ್ಷಕ ಎಮ್.ಎಮ್. ಮಕಾಂದಾರ, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಭಾಷಾಸಾಬ ಮಲ್ಲಸಮುದ್ರ, ಬಸವೇಶ್ವರ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಗದಗ-ಬೆಟಗೇರಿ ನಗರಸಭೆಯ ಪೌರಕಾರ್ಮಿಕರಿಗೆ ಮಾಸ್ಟರ್ ಹೆಲ್ತ್ ಚೆಕಪ್ ಹಾಗೂ ತಂಬಾಕು ಸೇವನೆಯಿಂದ ಆಗುವ ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ಎಲ್ಲೆಂದರಲ್ಲಿ ಕಸ ಎಸೆದಂತೆ ಹಾಗೂ ಸಮರ್ಪಕ ಕಸ ವಿಲೇವಾರಿಗೆ ಸಹಕಾರ ನೀಡುವಂತೆ ಕೋರಲಾಗಿದೆ.
Advertisement