ವಿಜಯಸಾಕ್ಷಿ ಸುದ್ದಿ, ರೋಣ: ಸ್ವಚ್ಛ ಭಾರತ ಮಿಷನ್ ಅಡಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಅಭಿಯಾನಕ್ಕೆ ರೋಣ ತಾಲೂಕಿನಲ್ಲಿ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರೋಣ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಹೊಳೆ ಆಲೂರು ಗ್ರಾಮಕ್ಕೆ ಭೇಟಿ ನೀಡಿ ಅಭಿಯಾನದಲ್ಲಿ ಭಾಗವಹಿಸಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.
ಹೊಳೆ ಆಲೂರ ಗ್ರಾಮದಲ್ಲಿನ ಅಂಗಡಿ–ಮುಂಗಟ್ಟುಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಪರಿಶೀಲಿಸಿದರು. ಸ್ವಚ್ಛತಾ ವಾಹನಗಳ ಮೂಲಕ ಸರಿಯಾದ ಕಸ ವಿಲೇವಾರಿ ವಿಧಾನ, ಕುಡಿಯುವ ನೀರಿನ ಗುಣಮಟ್ಟ ಕಾಪಾಡುವಿಕೆ ಹಾಗೂ ಪ್ಲಾಸ್ಟಿಕ್ ನಿಷೇಧದ ಬಗ್ಗೆ ವ್ಯಾಪಾರಿಗಳು ಮತ್ತು ಗ್ರಾಹಕರಿಗೆ ಅರಿವು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಅಂಗಡಿ ಮಾಲೀಕರು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ಕಸ ವಿಲೇವಾರಿಯ ವಿಧಾನಗಳನ್ನು ಪ್ರಾಯೋಗಿಕವಾಗಿ ಕಲಿತುಕೊಂಡರು. ಅಧಿಕಾರಿಗಳು ಕುಡಿಯುವ ನೀರಿನ ಮಾದರಿ ಪರೀಕ್ಷೆ ಹಾಗೂ ಶುದ್ಧತೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ವಿವರಿಸಿದರು. ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಅವರು, ಸಾಮಾಜಿಕ ಲೆಕ್ಕ ಪರಿಶೋಧನೆ, ಸ್ಥಳೀಯ ಲೆಕ್ಕ ಪರಿಶೋಧನೆ, ಮನರೇಗಾ ಯೋಜನೆಯಡಿ ಉದ್ಯೋಗ ಸೃಷ್ಟಿ, ಸಿಬ್ಬಂದಿಗಳ ಹಾಜರಾತಿ ಸೇರಿದಂತೆ ವಿವಿಧ ವಿಷಯಗಳ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಗಿರಿತಮ್ಮನ್ನವರ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.



