ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸ ಚೆಲ್ಲಿರುವುದರ ಕುರಿತು ಅಸಮಾಧಾನಗೊಂಡ ಶಾಸಕ ಜಿ.ಎಸ್. ಪಾಟೀಲ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಾಧಿಕಾರಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಸರ್ವ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಪಟ್ಟಣದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಿರುವುದು ಕಂಡುಬರುತ್ತಿದೆ.
ಪಟ್ಟಣದ ಜಕ್ಕಲಿ ರಸ್ತೆಯಲ್ಲಿರುವ ರಾಜ ಕಾಲುವೆ ಸೇರಿದಂತೆ ಸಾರ್ವಜನಿಕ ಮಹಿಳಾ ಶೌಚಾಲಯದವರೆಗೆ ಸ್ವಚ್ಛತಾ ಕಾರ್ಯ ನಡೆದಿದ್ದು, ನಾಗರಿಕ ಸಮುದಾಯದಲ್ಲಿ ಸ್ವಲ್ಪ ಮಟ್ಟಿಗೆ ನಿರಾಳತೆ ಮೂಡುವಂತಾಗಿದೆ. ಸತತ ಮಳೆಯಿಂದ ಸಂಚಾರಕ್ಕೆ ದುಸ್ತರವಾದ ಸ್ಥಿತಿಯಲ್ಲಿದ್ದ ರಸ್ತೆಗಳನ್ನು ಜೆಸಿಬಿ ಮೂಲಕ ಸ್ವಚ್ಛಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಗಿದೆ.
ಪುರಸಭೆಯ ಉಪಾಧ್ಯಕ್ಷ ಹನ್ಮಂತಪ್ಪ ತಳ್ಳಿಕೇರಿ ನಿತ್ಯ ಬೆಳಗಿನ ಜಾವ ಪುರಸಭೆ ಸಿಬ್ಬಂದಿಗಳು ನಿರ್ವಹಿಸುವ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡುತ್ತಿರುವುದು ಪಟ್ಟಣದ ಜನರಲ್ಲಿ ಭರವಸೆ ಮೂಡಿಸುವಂತೆ ಮಾಡಿದೆ. ಅಧ್ಯಕ್ಷೆ ಬಸ್ಸಮ್ಮ ಕೊಪ್ಪದ ಕೂಡ ಸ್ವಚ್ಛತಾ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಕಂಡುಬರುತ್ತಿದೆ. ಒಟ್ಟಿನಲ್ಲಿ, ಶಾಸಕ ಜಿ.ಎಸ್. ಪಾಟೀಲರ ಖಡಕ್ ಸಂದೇಶದಿಂದ ಜನಪ್ರತಿನಿಧಿಗಳು ಸೇರಿ ಅಧಿಕಾರಿ ವರ್ಗ ಎಚ್ಚೆತ್ತು ಕೆಲಸ ನಿರ್ವಹಿಸುತ್ತಿರುವುದು ಕಂಡುಬರುತ್ತಿದೆ.
ಈ ಕುರಿತು ರೋಣ ಪುರಸಭೆ ಮುಖ್ಯಾಧಿಕಾರಿ ರಮೇಶ ಹೊಸಮನಿ ಪ್ರತಿಕ್ರಿಯಿಸಿ, ನಿರಂತರ ಮಳೆಯಿಂದ ಸ್ವಚ್ಛತಾ ಕಾರ್ಯಕ್ಕೆ ಹಿನ್ನಡೆಯಾಗಿತ್ತು. ಶಾಸಕರು ಪಟ್ಟಣ ಅಂದವಾಗಿ ಕಾಣಬೇಕು ಎಂದು ಸೂಚಿಸಿದ್ದರು. ಹೀಗಾಗಿ 23 ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ ಎಂದರು.
ಪಟ್ಟಣದ ಸೌಂದರ್ಯ ಹೆಚ್ಚಿಸಲು ಶಾಸಕ ಜಿ.ಎಸ್. ಪಾಟೀಲ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಕೆಲ ವಾರ್ಡ್ಗಳಲ್ಲಿ ಅಭಿಚೃದ್ಧಿ ಕಾರ್ಯಗಳು ಸಹ ನಡೆಯುತ್ತಿವೆ. ಈಗ ಮತ್ತೆ 5 ಕೋಟಿ ರೂಗಳನ್ನು ರೋಣ ಪಟ್ಟಣದ ಅಭಿವೃದ್ಧಿಗೆ ನೀಡಿದ್ದಾರೆ. ಎಲ್ಲ ಸದಸ್ಯರುಗಳು ತಮ್ಮ ವಾರ್ಡ್ ಗಳ ಸ್ವಚ್ಛತೆಗೆ ಆದ್ಯತೆ ನೀಡಿದ್ದು, ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.
– ಹನ್ಮಂತಪ್ಪ ತಳ್ಳಿಕೇರಿ.
ಪುರಸಭೆ ಉಪಾಧ್ಯಕ್ಷರು.