ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲೆಯ 388 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಡಿಬಿಓಟಿ (DBOT) ಮಾದರಿಯಲ್ಲಿ ಜಾರಿಯಲ್ಲಿರುವ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಅವರು ನಿನ್ನೆ ಬುಧವಾರ ಸಂಜೆ ಸವದತ್ತಿಯ ವಿದ್ಯುತ್ ವಿತರಣಾ ಉಪಕೇಂದ್ರ ಹಾಗೂ ಹಿರೇಉಳ್ಳಿಗೇರಿ ಗ್ರಾಮದಲ್ಲಿ ನಿರ್ಮಿಸಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಜಲ ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.
ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಎಲ್&ಟಿ ಕಂಪನಿಯು ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುತ್ತಿದ್ದು, ಇಂಟೆಕ್ ಪಾಯಿಂಟ್, ಪೈಪ್ಲೈನ್ ಮಾರ್ಗ ಹಾಗೂ ವಾಟರ್ ಟ್ರೀಟ್ಮೆಂಟ್ ಪ್ಲಾಂಟ್ಗಳ ನಿರ್ಮಾಣ ಕಾಮಗಾರಿಗಳು ಗುಣಮಟ್ಟದಿಂದ ಆಗಬೇಕು. ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಎಂದು ಹೇಳಿದರು.
ಪ್ರಸ್ತುತ ರೇಣುಕಾ ಜಲಾಶಯದಿಂದ ನೇರವಾಗಿ ನೀರನ್ನು ಪಂಪ್ ಮಾಡುವ ಕಾಮಗಾರಿ ಹಾಗೂ ಜಲ ಶುದ್ಧೀಕರಣ ಘಟಕದ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದೆ. ರಾ ವಾಟರ್ ರೈಸಿಂಗ್ ಮೇನ್ನ ಬಾಕಿ ಕೆಲಸಗಳನ್ನು 7 ದಿನಗಳೊಳಗೆ ಹಾಗೂ WTP ಕಾಮಗಾರಿಗಳನ್ನು 1 ತಿಂಗಳೊಳಗೆ ಪೂರ್ಣಗೊಳಿಸಲು ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸವದತ್ತಿ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಭೇಟಿ ನೀಡಿ, ನೀರು ಸರಬರಾಜು ಯೋಜನೆಗೆ ಸಂಬಂಧಿಸಿದ ಪ್ರಸರಣ ರೇಖೆ ಕಾಮಗಾರಿಯನ್ನು ಪರಿಶೀಲಿಸಿದರು. ಸಂಬಂಧಿತ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಈ ಕಾಮಗಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಸಿಇಓ ಅವರು ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾ ಅಭಿಯಂತರ ಜಗದೀಶ ಪಾಟೀಲ, ಗುತ್ತಿಗೆದಾರ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಜಿ.ಪಂ ಅಧಿಕಾರಿಗಳು ಉಪಸ್ಥಿತರಿದ್ದರು.


