ಚಿಕ್ಕಬಳ್ಳಾಪುರ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಪೂರ್ಣ ಜವಾಬ್ದಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತೀವ್ರ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಇದರ ಪರಿಣಾಮವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಕಿಡಿಕಾರಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುವವರನ್ನೇ ಬಂಧಿಸುವುದು ಯಾವ ರೀತಿಯ ಆಡಳಿತ ಎಂದು ಅವರು ಪ್ರಶ್ನಿಸಿದರು.
ದೇಶದ ಪ್ರತಿಯೊಬ್ಬ ಯುವಕ-ಯುವತಿಗೂ ಗುಣಮಟ್ಟದ ಶಿಕ್ಷಣ ಪಡೆಯುವ ಹಕ್ಕನ್ನು ಸಂವಿಧಾನ ನೀಡಿದೆ. ಶಿಕ್ಷಣ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂಬುದನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲೇ ಸ್ಪಷ್ಟಪಡಿಸಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಈ ಹಿಂದೆ ಸಿಇಟಿ (CET) ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ಯಶಸ್ವಿಯಾಗಿ ನಡೆಸುತ್ತಿತ್ತು. ತಾವು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿಯೂ ಯಾವುದೇ ಗೊಂದಲವಿಲ್ಲದೆ ಪರೀಕ್ಷೆಗಳು ನಡೆದಿದ್ದವು. ಬಳಿಕ ಕೇಂದ್ರ ಸರ್ಕಾರ ಸಿಇಟಿ ಬದಲಿಗೆ ನೀಟ್ ಪರೀಕ್ಷೆಯನ್ನು ಜಾರಿಗೆ ತಂದಿತು. ಆರಂಭದಲ್ಲಿ ವಿರೋಧ ವ್ಯಕ್ತವಾದರೂ ವಿದ್ಯಾರ್ಥಿಗಳು ಅದನ್ನು ಒಪ್ಪಿಕೊಂಡರು. ಆದರೆ ಈಗ ಪದೇಪದೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸಿದೆ ಎಂದು ಅವರು ಆರೋಪಿಸಿದರು.
ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಡಿಸಿಎಂ ಪರಮೇಶ್ವರ್ ಆಗ್ರಹಿಸಿದರು.

