ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಾಗೂ ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ ಇಡುಗಂಟು ಯೋಜನೆಯ ಅನುದಾನವನ್ನು ಬಿಡುಗಡೆಗೊಳಿಸಿದ್ದಕ್ಕೆ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ, ವಿಧಾನ ಪರಿಷತ್ನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ, ಕಾನೂನು ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ವಿಧಾನ ಪರಿಷತ್ನ ಎಲ್ಲಾ ಸದಸ್ಯರಿಗೆ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪರವಾಗಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್.ಕಲ್ಮನಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವರು ನಾನ್ ಯುಜಿಸಿ ಹಾಗೂ ಯುಜಿಸಿ ಎಂಬ ಭೇದಭಾವ ಮಾಡದೆ ಆದಷ್ಟು ಬೇಗ ಸೇವೆ ಸಲ್ಲಿಸಲು ಆದೇಶ ಹೊರಡಿಸಬೇಕು ಎಂದು ಡಾ. ಹನುಮಂತಗೌಡ ಆರ್.ಕಲ್ಮನಿ, ರಾಜ್ಯ ಕಾರ್ಯದರ್ಶಿ ಶಶೀಕಲಾ ಜೋಳದ, ವಿ.ಎಂ. ದೇಸಾಯಿಗೌಡರ, ಭಗತ್ಸಿಂಗ್ ನವಲೂರಕರ, ಡಾ. ಅಡವೆಪ್ಪ ಇಟಗಿ, ದಾನೇಶ್ವರಿ, ಜಿ. ಪಾರ್ವತಿ ತಾರಿಹಾಳ ಸೇರಿದಂತೆ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.



