ಬೆಂಗಳೂರು:- ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿ ವಿವಿಗಳನ್ನು ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು.
ಈ ಸಂಬಂಧ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ. ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ 400 ಕೋಟಿ ರೂ. ಅನುದಾನ ನೀಡಬೇಕಿದೆ. ಆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕಾಗಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿ ಆ ವಿವಿಗಳನ್ನು ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಿಜಯೇಂದ್ರ ಟೀಕಿಸಿದರು.
ಅತಿಥಿ ಶಿಕ್ಷಕರಿಗೆ ಹಿಂದೆ 5 ಸಾವಿರ ಇದ್ದ ಗೌರವಧನವನ್ನು 2,500 ರೂ. ಹೆಚ್ಚಿಸಿ 7,500 ಕೊಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು. ಬಳಿಕ ಅದನ್ನು 10 ಸಾವಿರಕ್ಕೆ ಬಿಜೆಪಿ ಸರ್ಕಾರ ಏರಿಸಿದ್ದನ್ನು ತಾವು ತಮ್ಮ ಕರಪತ್ರದಲ್ಲಿ ಪ್ರಸ್ತಾಪಿಸಿದ್ದೀರಿ. ಅತಿಥಿ ಶಿಕ್ಷಕರು ನಾಡಿನ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕನಿಷ್ಠ ಬೇಡಿಕೆಗಳಿಗಾದರೂ ಸ್ಪಂದಿಸುವುದು ಸರ್ಕಾರದ ಕರ್ತವ್ಯ ಎಂದು ನುಡಿದರು.