ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿ ಇಂಡಿ ಪಂಪ್, ಪೊಲೀಸ್ ಠಾಣೆ ಮೇಲಿನ ದಾಳಿಕೋರರ ವಿರುದ್ಧದ ಪ್ರಕರಣಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ನಿರ್ಧರಿಸಿದ್ದು ಮತ ಓಲೈಕೆಯ ರಾಜಕಾರಣವಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ. ಹೀಗಾಗಿ, ಆರೋಪಿಗಳ ವಿರುದ್ಧದ ಕೇಸುಗಳನ್ನು ಹಿಂಪಡೆಯಲು ಹೊರಟಿರುವದು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ನೈತಿಕತೆ ಹಾಗು ಆತ್ಮಸ್ಥೈರ್ಯ ಕುಂದುತ್ತಿದೆ. ರಾಜ್ಯ ಸರ್ಕಾರದ ಸಂವಿಧಾನ ವಿರೋಧಿ ನೀತಿ ನಾಚಿಕೆಗೇಡಿನ ಸಂಗತಿಯಾಗಿದ್ದು, ಇದೊಂದು ಮತ ಓಲೈಕೆಯ ರಾಜಕಾರಣವಾಗಿದೆ.
ಹುಬ್ಬಳ್ಳಿಯಲ್ಲಿ ನಡೆದ ಘಟನೆಯು ಸಮಾಜದ ಎಲ್ಲ ಜನರಲ್ಲಿ ನೆನಪು ಉಳಿಸಿದ್ದು ಇಂತಹ ಹೇಯ ಘಟನೆಯಿಂದ ಸಮಾಜಕ್ಕೆ ಒಂದು ಕೆಟ್ಟ ಸಂದೇಶ ಬಂದಿದೆ. ಇಂತಹ ಕ್ರೌರ್ಯವನ್ನು ಮಾಡಿದ ಗಲಭೆಕೋರರ ಮೇಲಿನ ಕೇಸ್ ವಾಪಸ್ ಪಡೆಯುತ್ತಿರುವದು ಖಂಡನೀಯ. ಕೂಡಲೇ ಈ ನಿರ್ಧಾರವನ್ನು ಕೈಬಿಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.