ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದ ಕಾಂಗ್ರೆಸ್ ಸರಕಾರ ಮುಸ್ಲಿಂ ಸಮುದಾಯದ ಪರವಾಗಿರುವ ಸರಕಾರವಾಗಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ, ಯಾದಗಿರಿಯ ದಲಿತ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ಘಟನೆಗಳನ್ನು ನೋಡಿದರೆ ಕಾಂಗ್ರೆಸ್ ಮುಸ್ಲಿಂ ಗೂಂಡಾಗಳನ್ನು ಪೋಷಿಸುತ್ತಿರುವಂತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಬುಧವಾರ ಇಲ್ಲಿನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದರೆ ಧರ್ಮಾಧಾರಿತವಾಗಿರುವ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದಿದ್ದಾರೆ.
ಆದರೂ ಕಾಂಗ್ರೆಸ್ಸಿಗರು ಮಾತ್ರ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ವದಂತಿ ಹರಿಬಿಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರು ನಿಧನರಾದಾಗ ಅವರ ಅಂತ್ಯಕ್ರಿಯೆಗೆ ಜಾಗ ನೀಡದವರು ಇಂದು ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಕಾಂಗ್ರೆಸ್ ದೇಶದ ಪ್ರತಿಯೊಬ್ಬ ಮಹಿಳೆಗೂ 1 ಲಕ್ಷ ರೂ. ಕೊಡುವದಾಗಿ ವಾಗ್ದಾನ ಮಾಡಿದೆ. ದೇಶದಲ್ಲಿ 65 ಕೋಟಿ ಮಹಿಳೆಯರಿದ್ದು, ಒಟ್ಟು ಭರವಸೆ ಈಡೇರಿಸಲು 65 ಲಕ್ಷ ಕೋಟಿ ರೂ. ಹಣ ಬೇಕಾಗುತ್ತದೆ. ದೇಶದ ಬಜೆಟ್ 40 ಲಕ್ಷ ಕೋಟಿ ರೂ. ದಾಟಿಲ್ಲ. ಹೀಗಾಗಿ ಇನ್ನುಳಿದ ಹಣವನ್ನು ಕಾಂಗ್ರೆಸ್ ಯಾವುದಾದರೂ ರಾಜ್ಯವನ್ನು ಮಾರಿ ಕೊಡಬೇಕಾಗುತ್ತದೆ ಎಂದು ಟೀಕಿಸಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಬಿಜೆಪಿ ಮುಖಂಡರಾದ ಅನಿಲ ಮೆಣಸಿನಕಾಯಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಮೋಹನ ಮಾಳಶೆಟ್ಟಿ, ಎಂ.ಎಂ. ಹಿರೇಮಠ, ನಾಗರಾಜ ಕುಲಕರ್ಣಿ, ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ನರೇಂದ್ರ ಮೋದಿ 14 ವರ್ಷ ಗುಜರಾತ್ ಮುಖ್ಯಮಂತ್ರಿಯಾಗಿ, 10 ವರ್ಷ ಪ್ರಧಾನಿಯಾಗಿ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಕೇವಲ 2 ಕೋಟಿ ಆಸ್ತಿ ಹೊಂದಿದ್ದಾರೆ. ಆದರೆ ಡಿ.ಕೆ. ಶಿವಕುಮಾರ ಮತ್ತು ಸುರೇಶ ಸಹೋದರರು 20 ಸಾವಿರ ಕೋಟಿ ರೂ. ಆಸ್ತಿ ಮಾಡಿಕೊಂಡಿದ್ದಾರೆ. ರೌಡಿ ಕೋತ್ವಾಲನ ಶಿಷ್ಯ ಇಂದು ಪ್ರಧಾನಿ ನರೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ. ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾದರೆ ಕಾಂಗ್ರೆಸ್ ನಾಯಕರಿಗೆ ಚೊಂಬೇ ಗತಿ.
– ಬಸನಗೌಡ ಪಾಟೀಲ ಯತ್ನಾಳ.
ಶಾಸಕರು, ವಿಜಯಪುರ.