ಹುಬ್ಬಳ್ಳಿ:- ರಾಜ್ಯ ದಿವಾಳಿ ಆಗಿರುವುದನ್ನು ಕಾಂಗ್ರೆಸ್ ನಾಯಕರೇ ಒಪ್ಪಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಶಕ್ತಿ ಯೋಜನೆ ನಿಲ್ಲಿಸುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾಯಿತು. ಈಗ ಖುದ್ದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯ ದಿವಾಳಿ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಅಂತೂ ಕಾಂಗ್ರೆಸ್ ನಾಯಕರಿಗೆ ತಡವಾಗಿ ಆದರೂ ಜ್ಞಾನೋದಯ ಆಗುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
“ರಾಜ್ಯದ ಬಜೆಟ್ ಗಾತ್ರ ನೋಡಿಕೊಂಡು ಗ್ಯಾರಂಟಿ ಘೋಷಿಸಬೇಕು. ಒಂದೇ ಆದರೂ ಅರ್ಥ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ಐದಾರು ಯೋಜನೆ ಘೋಷಿಸಿದರೆ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕದಂತಹ ಸ್ಥಿತಿಯಾಗುತ್ತದೆ” ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗಿದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲು ಆಗುವುದಿಲ್ಲ ಎಂಬ ಖರ್ಗೆ ಅವರ ಮಾತು ಗ್ಯಾರಂಟಿಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ ಎಂಬುದನ್ನು ಸಾರಿ ಹೇಳುವಂತಿದೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.
ಚುನಾವಣೆ ಎದುರಿಸುವ ಆವೇಶದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ಸಾಕಾಗಿ ಹೋಗಿದೆ ಎಂದು ಜೋಶಿ ಹೇಳಿದ್ದಾರೆ.