ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ನಡೆದಿದೆ.
ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ವಿಶ್ವನಾಥ್ ಟೀ ಕುಡಿಯಲು ಸ್ಥಳೀಯ ಅಂಗಡಿಗೆ ತೆರಳಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ದಾಳಿ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಹಲ್ಲೆ ವೇಳೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಗಾಯಗೊಂಡಿರುವ ವಿಶ್ವನಾಥ್ ಅವರ ಎರಡೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ ಎಂದು ತಿಳಿದುಬಂದಿದೆ. ಗಾಯಾಳುವಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಸ್ಪೀಟ್ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



