ಗ್ರಾಮದ ಕೆರೆಗೆ ತಡೆಗೋಡೆ ನಿರ್ಮಾಣ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ. ಕೆರೆಗಳು ಕುಡಿಯುವ ನೀರಿನ ಮೂಲಗಳಾಗಿವೆ. ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯರಿನಾರಾಯಣಪುರ ಗ್ರಾಮದ ಕೆರೆಗೆ ತಡೆಗೋಡೆ ನಿರ್ಮಾಣ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

Advertisement

ಶನಿವಾರ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಜೂನ್ 19ರಂದು ಕೆರೆಯಲ್ಲಿ ಮುಳುಗಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲಾ ಪಂಚಾಯತ, ಜಿಲ್ಲಾಡಳಿತದಿಂದ ಕೆರೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದರು.

ಸಂತೋಷ ಲಾಡ್ ಫೌಂಡೇಶನ್‌ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನವನ್ನು ವಿತರಣೆ ಮಾಡಿದರು. ಕುಟುಂಬಸ್ಥರು ಹೆಚ್ಚಿನ ಧೈರ್ಯ ತಂದುಕೊಳ್ಳಬೇಕು ಎಂದು ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ., ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್. ಅಕ್ಕಿ, ಕುಸುಮಾವತಿ ಶಿವಳ್ಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಶೀಲ್ದಾರ ರಾಜು ಮಾವರಕರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸಿಪಿ ವಿನೋದ ಮುಕ್ತೇದಾರ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಗ್ರಾ.ಪಂ ಅಧ್ಯಕ್ಷೆ ಮಮತಾ ಬೆಟದೂರ, ಉಪಾಧ್ಯಕ್ಷೆ ತಾಯವ್ವ ಕೆಂಚಣ್ಣವರ, ಅಭಿವೃದ್ಧಿ ಅಧಿಕಾರಿ ಧರ್ಮಪ್ರಸಾದ ಕಾಲವಾಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ ರೂ. 50 ಲಕ್ಷ ಅನುದಾನವನ್ನು ನೀಡಲಾಗಿತ್ತು. ಕೆರೆ ಕೂಡ ಬಹಳ ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.


Spread the love

LEAVE A REPLY

Please enter your comment!
Please enter your name here