ಬೆಂಗಳೂರು:- ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಮೂವರು ಶಾಸಕರು ಅಡ್ಡಮತದಾನ ಮಾಡಿರುವ ಮಾಹಿತಿ ಲಭ್ಯವಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳಾದ ಲಿಂಗರಾಜು ಪಾಟೀಲ್ ಹಾಗೂ ರಘು ಕೌಟಿಲ್ಯ ಗೆಲುವು ಸಾಧಿಸಿದ್ದಾರೆ. ಆದರೆ ಪಕ್ಷದ ಮೂರು ಮತಗಳು ಅಡ್ಡಮತದಾನವಾಗಿರುವುದು ಖಚಿತವಾಗಿದೆ ಎಂದು ಹೇಳಿದರು.
ಯಾವ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬುದು ಶೀಘ್ರದಲ್ಲೇ ತಿಳಿಯಲಿದ್ದು, ಪಕ್ಷದ ವೇದಿಕೆಯಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಬಿಜೆಪಿಯ ಒಂದು ಮತ ಅಸಿಂಧುವಾಗಿದ್ದು, ಜನತಾದಳ ಅಭ್ಯರ್ಥಿಗೆ ನಾಲ್ಕು ಮತಗಳನ್ನು ನೀಡುವಂತೆ ಪಕ್ಷದಿಂದ ಸೂಚನೆ ನೀಡಲಾಗಿತ್ತು. ಆ ಮತಗಳು ಅವರಿಗೆ ಹೋಗಿವೆ ಎಂದು ಭಾವಿಸಲಾಗಿದೆ ಎಂದು ಅಶೋಕ್ ಹೇಳಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಗೆಲುವು ಸಾಧಿಸಿದ ಲಿಂಗರಾಜು ಪಾಟೀಲ್ ಮತ್ತು ರಘು ಕೌಟಿಲ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು. ಲಿಂಗರಾಜು ಪಾಟೀಲ್ ಅವರಿಗೆ 30 ಮತಗಳನ್ನು ನಿಗದಿಪಡಿಸಲಾಗಿದ್ದರೂ, ಮೂರು ಮತಗಳು ಅಡ್ಡಮತದಾನವಾಗಿವೆ. ರಘು ಕೌಟಿಲ್ಯ ಅವರಿಗೆ ನೀಡಿದ್ದ 30 ಮತಗಳಲ್ಲಿ ಒಂದು ಮತ ಅಸಿಂಧುವಾಗಿದೆ. ಅಡ್ಡಮತದಾನ ಮಾಡಿದವರು ಯಾರು ಹಾಗೂ ಅದರ ಹಿಂದಿನ ಕಾರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಳಿಕ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ವಿಜಯೇಂದ್ರ ತಿಳಿಸಿದರು.
ವಿಧಾನ ಪರಿಷತ್ ಚುನಾವಣೆಯ ಬಳಿಕ ಬಿಜೆಪಿಯಲ್ಲಿ ಅಡ್ಡಮತದಾನ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.



