ವಿಜಯನಗರ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ.
ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ.
ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಸಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಸಿಎಂಗೆ ವಿನೂತನ ರೀತಿಯಲ್ಲಿ ಈ ಬಡ ಕುಟುಂಬ ಅಭಿನಂದನೆ ಸಲ್ಲಿಸಿದೆ.
ಇನ್ನು ಕಳೆದ 2023 ಜುಲೈ 19ರಿಂದ ಬಹುನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನಿಡಿದ್ದರು. ಫಲಾನುಭವಿಗಳು ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಬಾಬುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕಬಹುದು ಎಂದು ಹೇಳಿದ್ದರು.