ವಿಜಯಸಾಕ್ಷಿ ಸುದ್ದಿ, ಗದಗ: ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ನಾಗರಿಕನು ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಕರೆ ನೀಡಿದರು.
ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ (SVEEP) ಸಭೆಯಲ್ಲಿ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಲ್ಲಿ ಅರಿವು ಮೂಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವ ಮತದಾರರು ಚುನಾವಣೆಯ ಪ್ರಮುಖ ಶಕ್ತಿ. ಅವರಲ್ಲಿ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮಾಡಿಕೊಳ್ಳಬೇಕು. ವಿಡಿಯೋ, ಪೋಸ್ಟರ್, ಸಣ್ಣ ಜಾಹೀರಾತುಗಳ ಮೂಲಕ ಮತದಾನದ ಮಹತ್ವವನ್ನು ತಲುಪಿಸಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸದಸ್ಯರಿಗೆ ಮತದಾರರ ಶೇಕಡಾವಾರು ಹೆಚ್ಚಿಸುವ ಕಾರ್ಯವನ್ನು ಗುರಿಯನ್ನಾಗಿಸಿಕೊಂಡು ಕಾರ್ಯಯೋಜನೆ ರೂಪಿಸಬೇಕು ಎಂದು ಸೂಚಿಸಿದರು.
SVEEP ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿ, ಪ್ರಜಾಸತ್ತಾತ್ಮಕ ಚೇತನ ಹೆಚ್ಚಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಪಿ.ಎಸ್. ವಸ್ತ್ರದ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಹಾಯಕ ಆಯುಕ್ತ ಗಂಗಪ್ಪ ಎಂ, ಆರ್.ಎಸ್. ಬುರಡಿ, ಸಿದ್ದಲಿಂಗ ಮಸಾನಾಯಕ, ಡಾ. ಎಸ್.ಎಸ್. ನೀಲಗುಂದ, ಪದ್ಮಾವತಿ ಜಿ, ಅಮಿತ್ ಬಿದರಿ, ವಸಂತ ಮಡ್ಲೂರ, ಶಿವಕುಮಾರ ಕುರಿಯವರ, ಶರಣು ಗೊಗೇರಿ, ಜಿ.ಎಂ. ಮುಂದಿನಮಣಿ, ಕೆ. ಮಹಾಂತೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು, ಶಿಕ್ಷಣ ಇಲಾಖೆಯ ಪ್ರತಿನಿಧಿಗಳು ಹಾಗೂ SVEEP ನೊಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತ್ಯೇಕವಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಮತದಾರರ ರ್ಯಾಲಿಗಳು, ಕಿರುಚಿತ್ರ ಪ್ರದರ್ಶನ, ಮತದಾರ ಪ್ರೋತ್ಸಾಹ ಸ್ಪರ್ಧೆಗಳು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಿ.ಎಸ್. ವಸ್ತ್ರದ ಸಲಹೆ ನೀಡಿದರು.



